ಕಲಬುರ್ಗಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ 2021-22ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಮುಖ್ಯ ಬೆಳೆಗಳನ್ನು ತಾಲ್ಲೂಕುವಾರು, ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗೂರ ತಿಳಿಸಿದ್ದಾರೆ.
ಜಿಲ್ಲೆಗೆ 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಈ ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯೂನಿವರ್ಸಲ್ ಸೊಂಪೊ ಜನರಲ್ ಇನ್ಸೂರೆನ್ಸ್ ಕಂಪನಿ ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ.
ಬೆಳೆಗಳು ಯಾವವು?:ನೀರಾವರಿ ಹಾಗೂ ಮಳೆಯಾಶ್ರಿತ: ಮುಸುಕಿನಜೋಳ, ಜೋಳ, ತೊಗರಿ, ಶೇಂಗಾ, ಹತ್ತಿ.
ಮಳೆಯಾಶ್ರಿತ ಮಾತ್ರ: ಸಜ್ಜೆ, ಉದ್ದು, ಹೆಸರು, ಸೋಯಾ ಅವರೆ, ಎಳ್ಳು.
ಟೊಮೆಟೊ, ಅರಿಸಿನ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ. ಭತ್ತ (ನೀರಾವರಿ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2021ರ ಆಗಸ್ಟ್ 16 ಕೊನೆಯ ದಿನವಾಗಿದೆ.
ವೈಯಕ್ತಿಕ ವಿಮಾ ಪರಿಹಾರ: ಸ್ಥಳ, ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ, ಮೇಘ ಸ್ಫೋಟ ಮತ್ತು ಗುಡುಗು ಮಿಂಚಿಗಳಿಂದಾಗಿ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಈ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಿದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆಸಾಲ ಪಡೆಯದ ರೈತರು ಈ ಯೋಜನೆಯಡಿ ಭಾಗವಹಿಸಬಹುದಾಗಿದೆ. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀದಿಯನ್ನು ನೀಡಬೇಕು. ವಿಮಾ ಸಂಸ್ಥೆಗಳು ಬೆಳೆ ಸಾಲ ಪಡೆಯದ ರೈತರನ್ನು ತಮ್ಮ ಅಧಿಕೃತ ಏಜೆಂಟರ ಮೂಲಕವು ಸಹ ಯೋಜನೆಯಡಿ ನೋಂದಾಯಿಸಲು ಅನುಮತಿ ನೀಡಲಾಗಿದೆ.
ಪರಿಷ್ಕೃತ ಪಿ.ಎಂ.ಎಫ್.ಬಿ.ವೈ. ಮಾರ್ಗಸೂಚಿ ಅನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.
ಈ ಯೋಜನೆಯಡಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಒಳಪಡಿಸಲಾಗಿದೆ.
ಇಂತಹ ಸ್ಥಳಿಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂದಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡ 25ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುತ್ತದೆ. ಇಂತಹ ಸ್ಥಳಿಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂದಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.
2021–22 ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇಕಡ 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ 25ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ವಿಮೆಯನ್ನು ರದ್ದುಪಡಿಸಬಹುದು.
ರೈತರಿಗಾಗಿ ಸಹಾಯವಾಣಿ
ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ನಿಗದಿಪಡಿಸಲಾದ ವಿಮಾ ಮೊತ್ತ, ರೈತರ ವಿಮಾ ಮೊತ್ತ ಮತ್ತು ರೈತರು ಪಾವತಿಸಬೇಕಾದ ವಿಮಾ ಮೊತ್ತದ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800-200-5142 ಹಾಗೂ ತಮ್ಮ ತಾಲ್ಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಥವಾ ಬೆಂಗಳೂರಿನ ಯುನಿವರಸಲ್ ಸೊಂಪೊ ಜೆನೆರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆ ಈ ಕೆಳಕಂಡ ವಿಮಾ ಪ್ರತಿನಿಧಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಸಂಪರ್ಕಕ್ಕೆ: ಕಲಬುರ್ಗಿಜಿಲ್ಲೆ– ಮೊಬೈಲ್ ಸಂಖ್ಯೆ 9731499917, 8867508750, 9538185343, 9620006812, ಚಿತ್ತಾಪುರ-9731499917, ಅಫಜಲಪುರ-9902356434, ಜೇವರ್ಗಿ- 9731499917, ಆಳಂದ- 9731499917, ಕಲಬುರ್ಗಿ- 9538185343, ಚಿಂಚೋಳಿ- 8095384057, 9731499917 ಹಾಗೂ ಸೇಡಂ- 7204579007.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.