ಕಲಬುರ್ಗಿ: ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಜಮೀನು ನೀಡಿದ ರೈತರ ಕುಟುಂಬಗಳಿಗೆ ವಿಶ್ವವಿದ್ಯಾಲಯದಲ್ಲಿ ನೌಕರಿ ನೀಡಬೇಕು ಎಂದು ಆಗ್ರಹಿಸಿ ಹೈದರಾಬಾದ್ ಕರ್ನಾಟಕ ರೈತ ಹಿತರಕ್ಷಣಾ ಹೋರಾಟ ಸಮಿತಿ ಮುಖಂಡರು ಪ್ರಭಾರಿ ಕುಲಪತಿ ನಾಗರಾಜ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಈ ಕುರಿತು ಅನೇಕ ಬಾರಿ ಪ್ರತಿಭಟನೆ ನಡೆಸಿ ನೌಕರಿ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅಪಾರ ಪ್ರಮಾನದ ಭೂಮಿ ನೀಡಿದ 42 ರೈತರ ಕುಟುಂಬಗಳಿಗೆ ಹಿಂದಿನ ಕುಲಪತಿಗಳು ತಮ್ಮ ವಿಶ್ವವಿದ್ಯಾಲಯದಲ್ಲಿ ತಲಾ ಒಂದು ಉದ್ಯೋಗ ನೀಡಿದ್ದಾರೆ. ಇನ್ನೂ 44 ಕುಟುಂಬಗಳು ಬಾಕಿ ಉಳಿದಿದೆ. ಇವರಿಗೂ ಕೂಡಲೇ ಉದ್ಯೋಗ ಒದಗಿಸಿಕೊಡಬೇಕು. ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಕೆಲವರನ್ನು ಕೋವಿಡ್ ನೆಪದಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ. ಇದರಿಂದ ಅವರ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಕೂಡಲೇ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಒತ್ತಾಯಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಸಿರಗಾಪೂರ, ಮುಖಂಡರಾದ ಯಶ್ವಂತರಾಯ ಪಾಟೀಲ, ಭೀಮಾಶಂಕರ ಪಟ್ಟಣ, ಬಾಬಾ ಫಕ್ರುದ್ದೀನ್ ಇದ್ದರು.