ಕಲಬುರಗಿ: ‘ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದಾಗಿ ಭಾರತ ವಿಶ್ವದ ಪ್ರಬಲ ಪ್ರಜಾಪ್ರಭುತ್ವದ ರಾಷ್ಟ್ರವಾಗಿ ಹೊರಹೊಮ್ಮಿದೆ’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.
ನಗರದ ಹೊರವಲಯದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಸ್ವಾತಂತ್ರ್ಯದ ಬಳಿಕ ಭಾರತ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ನಮ್ಮನ್ನು ಗುಲಾಮರಂತೆ ನಡೆಸಿಕೊಂಡಿದ್ದ ಬ್ರಿಟಿಷರು, ನಮ್ಮ ಆಸ್ತಿ ಕಸಿದಕೊಂಡರು. ನಮ್ಮನ್ನು ನಾಗರಿಕರಂತೆ ಕಾಣಲಿಲ್ಲ. ನಮಗೆ ಯಾವುದೇ ಹಕ್ಕುಗಳನ್ನು ಸಹ ನೀಡಲಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ಈಗಾ ನಾವು ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿದ್ದೇವೆ’ ಎಂದರು.
ಸ್ವಾತಂತ್ರ್ಯ ಹೋರಾಟಗಾರ ಭೀಮರಾವ್ ಚಟ್ಟರಕಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪಾತ್ರ ಸ್ಮರಿಸಿ, ‘ವಿದ್ಯಾರ್ಥಿಗಳು ಉನ್ನತ ಸ್ಥಾನ ಅಲಂಕರಿಸಿ ರಾಷ್ಟ್ರಕ್ಕೆ ಕೀರ್ತಿ ತರಬೇಕು’ ಎಂದು ಮನವಿ ಮಾಡಿದರು.
ಸಿಯುಕೆ ಕುಲಸಚಿವ ಪ್ರೊ.ಬಸವರಾಜ ಪಿ ಡೋಣೂರ ಮಾತನಾಡಿ, ‘ನಮ್ಮ ಶಕ್ತಿ, ಸ್ಥಿರತೆ, ಬೆಳವಣಿಗೆಯು ದೇಶದ ಅಭಿವೃದ್ಧಿಯ ಮೇಲೆ ಅವಲಂಬಿತವಾಗಿದೆ. ಭಾರತ ಸುರಕ್ಷಿತವಾಗಿದ್ದಾಗ ಮಾತ್ರ ನಾವು ಸುರಕ್ಷಿತವಾಗಿರುತ್ತೇವೆ ಎಂದರು.
ಗ್ರಂಥಪಾಲಕ ಡಾ.ಪಿ.ಎಸ್.ಕಟ್ಟಿಮನಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ರೋಹಿಣಾಕ್ಷ, ಗಣಿತ ವಿಭಾಗದ ಸಹಾಯಕ ಡಾ.ಎನ್.ಸಂದೀಪ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.