ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆ ಅರಿವು ಅವಶ್ಯ: ಡಾ. ವೈ.ಎಸ್.ರವಿಕುಮಾರ್

ಕಲಬುರಗಿ ಪೊಲೀಸ್ ಆಯುಕ್ತ
Last Updated 10 ಸೆಪ್ಟೆಂಬರ್ 2022, 15:54 IST
ಅಕ್ಷರ ಗಾತ್ರ

ಕಲಬುರಗಿ: ‘ವೈದ್ಯಕೀಯ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕಲಿತರೆ ಅಪಘಾತದಿಂದ ಸಂಭವಿಸುವ ಸಾವು–ನೋವುಗಳ ಸಂಖ್ಯೆ ತಗ್ಗಿಸಬಹುದು’ ಎಂದು ಪೊಲೀಸ್ ಆಯುಕ್ತ ಡಾ. ವೈ.ಎಸ್.ರವಿಕುಮಾರ್ ಹೇಳಿದರು.

ಇಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಯುನೈಟೆಡ್ ಆಸ್ಪತ್ರೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಬಗ್ಗೆ ವೈದ್ಯರಿಂದ ಜನಸಾಮಾನ್ಯರು ತಿಳಿದುಕೊಳ್ಳವುದು ಅವಶ್ಯವಾಗಿದೆ. ವೈದ್ಯರು ಸಹ ರೋಗಿಗಳಿಗೆ ರಕ್ತಸ್ರಾವ ತಡೆ, ಹಾವು ಕಡಿತ, ದ್ರವಾಂಶದ ಕೊರತೆ, ಪ್ರಜ್ಞೆಹೀನ ಸ್ಥಿತಿ, ಸುಟ್ಟ ಗಾಯಗಳಂತಹ ಪ್ರಾಥಮಿಕ ಚಿಕಿತ್ಸೆಯ ಆರೋಗ್ಯ ತುರ್ತು ಬಗ್ಗೆ ಮಾಹಿತಿ ಕೊಡಬೇಕು’ ಎಂದರು.

‘ಕ್ಯಾನ್ಸರ್ ಪೀಡಿತರು ಹೊರತುಪಡಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಜನರಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸುವ ಜ್ಞಾನ ಬಂದರೆ ಇದರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗುತ್ತದೆ‘ ಎಂದರು.

ಆಸ್ಪತ್ರೆಯ ಮುಖ್ಯಸ್ಥ ಡಾ. ವಿಕ್ರಮ್ ಸಿದ್ದಾರೆಡ್ಡಿ ಮಾತನಾಡಿ, ‘ಆಸ್ಪತ್ರೆ ವತಿಯಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ನಿಭಾಯಿಸುವ ಕೌಶಲದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮಾತನಾಡಿ, ‘ಅಪಘಾತದಿಂದ ದಾಖಲಾದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತಿದೆ’ ಎಂದರು.

ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸಿಪಿ ದೀಪೆನ್ ಎಂ.ಎನ್. ಇದ್ದರು. ಇದೇ ವೇಳೆ ಜನರಿಗೆ ಯುನೈಟೆಡ್ ಆಸ್ಪತ್ರೆ ವತಿಯಿಂದ ಉಚಿತವಾಗಿ ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT