ಕಾಳಗಿ: ತಾಲ್ಲೂಕಿನ ರಟಕಲ್ ಗ್ರಾಮದ ವಿವಿಧ ಸಮಸ್ಯೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಮುಕ್ತಿ ಮೋರ್ಚಾ ತಾಲ್ಲೂಕು ಘಟಕದ ಕಾರ್ಯಕರ್ತರು ಶುಕ್ರವಾರ ರಟಕಲ್ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದರು.
ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ಗ್ರಾಮ ಪಂಚಾಯಿತಿವರೆಗೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಪ್ರತಿಭಟನಾಕಾರರು ಆಗಮಿಸಿದರು.
ರಟಕಲ್ ಗ್ರಾಮದಲ್ಲಿ ಬಸ್ ನಿಲ್ದಾಣವಿಲ್ಲದೆ ಆಶ್ರಯಕ್ಕಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಎಸ್.ಸಿ ವಾರ್ಡ್ ನಂ.1ರಲ್ಲಿ ಚರಂಡಿ ಸ್ವಚ್ಛಗೊಳಿಸದೆ ನಕಲಿ ಬಿಲ್ಲು ಸೃಷ್ಟಿಸಿ 15ನೇ ಹಣಕಾಸು ಯೋಜನೆಯಡಿ ಅನುದಾನ ದುರ್ಬಳಕೆ ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. 3 ತಿಂಗಳಿಂದ ನರೇಗಾ ಅಡಿ ಕೆಲಸ ಮಾಡಿದ ಕೂಲಿಕಾರರಿಗೆ ಕೂಲಿ ಹಣ ಕೂಡಲೇ ಬಿಡುಗಡೆ ಮಾಡಬೇಕು. ರಸ್ತೆ ಪಕ್ಕದ ವ್ಯಾಪಾರಸ್ಥರಿಗೆ ವಿನಾಕಾರಣ ಕಿರುಕುಳ ಕೊಡುತ್ತಿರುವ ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಕ್ರಮ ಜರುಗಿಸಬೇಕು ಎಂಬ ಇತ್ಯಾದಿ ಬೇಡಿಕೆಗಳಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.
ಭಾರತ ಮುಕ್ತಿ ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿ, ಮುಖಂಡರಾದ ಅವಿನಾಶ ಕೊಡದೂರ, ಕಲ್ಯಾಣರಾವ ರಟಕಲ್, ಸುಭಾಷ ಸ್ವಾಮಿ, ವಿಜಯಕುಮಾರ ಜಡಗಿ, ಮಾರುತಿ ಜಾಧವ, ಸತೀಶ ನಾವದಗಿ ಇದ್ದರು.