ಕಲಬುರ್ಗಿ: ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ಹಂಚಿಕೆ ಸಮಯದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.
ಚಿಂಚೋಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸಲು ಜ. 16ರರಂದು ಬೆಳಿಗ್ಗೆ 10 ಗಂಟೆಗೆ ಚಿಂಚೋಳಿಯ ಸಿ.ಬಿ. ಪಾಟೀಲ ಪಿಯು ಕಾಲೇಜಿನಲ್ಲಿ ನಿಗದಿಪಡಿಸಲಾಗಿತ್ತು. ಅಂದು ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅದೇ ದಿನ ಮಧ್ಯಾಹ್ನ 1 ಗಂಟೆಗೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ಅದೇ ರೀತಿ ಕಾಳಗಿ ತಾಲ್ಲೂಕಿನ ಗ್ರಾ.ಪಂ.ಗಳಿಗೆ ಜನವರಿ 16 ರಂದು ಮಧ್ಯಾಹ್ನ 2 ಗಂಟೆಗೆ ಕಾಳಗಿಯ ಕಾಳೇಶ್ವರ ದೇವಸ್ಥಾನದ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದನ್ನು, ಸಾಯಂಕಾಲ 4 ಗಂಟೆಗೆ ನಿಗದಿಪಡಿಸಿದೆ.
ಸಂಬಂಧಪಟ್ಟ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರ ಸಹಯೋಗದೊಂದಿಗೆ ಯಾವುದೇ ಲೋಪವಾಗದಂತೆ ಪ್ರಕ್ರಿಯೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.