ಜೇವರ್ಗಿ: ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕುಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬಹುತೇಕ ವಸತಿ ನಿಲಯಗಳು ಸ್ವಂತ ಕಟ್ಟಡ ಹೊಂದಿವೆ. ಆದರೆ ವಾರ್ಡನ್ ಕೊರತೆ ಇವುಗಳನ್ನು ಕಾಡುತ್ತಿವೆ.
ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕುಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ವಸತಿ ನಿಲಯಗಳಿವೆ. 9 ಜನ ವಾರ್ಡನ್ಗಳಿದ್ದು, 6 ಹುದ್ದೆಗಳು ಖಾಲಿ ಇವೆ.
‘15 ವಸತಿ ನಿಲಯಗಳಲ್ಲಿ 1,030 ಜನ ವಿದ್ಯಾರ್ಥಿಗಳಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಬೆಳಿಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ಸಂಜೆ ಊಟ ನೀಡಲಾಗುತ್ತಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಶೋಕ ನಾಯಕ ತಿಳಿಸಿದರು.
‘ಜೇವರ್ಗಿ ಹಾಗೂ ಯಡ್ರಾಮಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 19 ವಸತಿ ನಿಲಯಗಳಿವೆ. 9 ಜನ ವಾರ್ಡನ್ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 11 ಹುದ್ದೆಗಳು ಖಾಲಿ ಇವೆ. 14 ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ಇದೆ. 5 ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅಂಬವ್ವ ಮಾಹಿತಿ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಾಲ್ಕು ವಸತಿ ನಿಲಯಗಳು ಸ್ವಂತ ಕಟ್ಟಡ ಹೊಂದಿವೆ. ಒಂದು ವಸತಿ ನಿಲಯ ಪಟ್ಟಣದ ಶಾಂತನಗರ ಬಡಾವಣೆಯ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಒಟ್ಟು 5 ವಸತಿ ನಿಲಯಗಳಲ್ಲಿ 248 ವಿದ್ಯಾರ್ಥಿಗಳಿದ್ದಾರೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಶಕುಂತಲಾ ತಿಳಿಸಿದರು.
ಮೂರು ಇಲಾಖೆಗಳ ವಸತಿ ನಿಲಯಗಳಲ್ಲಿ ಗುಣಮಟ್ಟದ ಊಟ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರುತ್ತಾರೆ. ಪುಸ್ತಕಗಳ ಕೊರತೆ ಇದೆ. ಒಬ್ಬ ವಾರ್ಡನ್ ಎರಡು ಹಾಸ್ಟೆಲ್ಗಳನ್ನು ನೋಡಿಕೊಳ್ಳುತ್ತಾರೆ. ಆದ್ದರಿಂದ ಸರಿಯಾಗಿ ನಿರ್ವಹಣೆ ಮಾಡಲು ಆಗುವುದಿಲ್ಲ. ಶೌಚಾಲಯಗಳನ್ನು ನಿಯಮಿತವಾಗಿ ಸ್ವಚ್ಛ ಮಾಡುವುದಿಲ್ಲ. ಕೆಲ ವಸತಿ ನಿಲಯಗಳಲ್ಲಿ ಸ್ವಚ್ಛತೆ ನೋಡಲೂ ಸಿಗುವುದಿಲ್ಲ ಎಂಬುದು ವಿದ್ಯಾರ್ಥಿಗಳ ಆರೋಪ.
ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳಲ್ಲಿನ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ
-ಅಶೋಕ ನಾಯಕ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯ ಒದಗಿಸಲಾಗಿದೆ -ಶಕುಂತಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.