ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಅನಿರುದ್ಧ ಶ್ರವಣ್ ಪಿ. ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ವಿಜಯನಗರ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ ಶ್ರವಣ್ ಅವರನ್ನು ಸರ್ಕಾರ ಇತ್ತೀಚೆಗೆ ವರ್ಗಾವಣೆಗೊಳಿಸಿತ್ತು. ಆದರೆ ಹುದ್ದೆ ತೋರಿಸಿರಲಿಲ್ಲ. ಇದೀಗ ಕೆಕೆಆರ್ ಡಿಬಿ ಕಾರ್ಯದರ್ಶಿ ಸ್ಥಾನದಂತಹ ಮಹತ್ವದ ಹುದ್ದೆ ನೀಡಿದೆ.
ಅನಿರುದ್ಧ ಶ್ರವಣ್ ಅವರು ಕೆಲ ವರ್ಷಗಳ ಹಿಂದೆ ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯ ನಿರ್ವಹಿಸಿದ್ದರು. ಆ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದಾಗಿ ಜನಾನುರಾಗಿಯಾಗಿದ್ದರು.