ಕಲಬುರಗಿ: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಹಾಗೂ ಸಾರ್ವಜನಿಕರ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತ ವತಿಯಿಂದ ಚಿಂಚೋಳಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ 'ಜನತಾ ದರ್ಶನ' ಆಯೋಜಿಸಲಾಗಿದ್ದು, ನೂರಾರು ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಚಿಂಚೋಳಿ ಸೇರಿದಂತೆ ವಿವಿಧ ತಾಲ್ಲೂಕಿನ ಸಾರ್ವಜನಿಕರು ಅರ್ಜಿಗಳನ್ನು ಹಿಡಿದು ಬೆಳಿಗ್ಗೆಯಿಂದಲೇ ತಾಲ್ಲೂಕು ಕ್ರೀಡಾಂಗಣದತ್ತ ಬಂದರು.
ಮಹಿಳಾ ಸ್ವಸಹಾಯ ಸಂಘದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ, ಗ್ರಾಮೀಣಾಭಿವೃದ್ಧಿ, ಪಶುಪಾಲನಾ ಮತ್ತು ಪಶುವೈದ್ಯಕೀಯ, ಅರಣ್ಯ, ಜಿಲ್ಲಾ ಪೊಲೀಸ್, ಕೃಷಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ತೋಟಗಾರಿಕೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆಧಾರ್ ತಿದ್ದುಪಡಿ, ಕಂದಾಯ, ಮೀನುಗಾರಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನೀರಾವರಿ, ಹಿಂದುಳಿದ ವರ್ಗಗಳ ಇಲಾಖೆ, ಶಿಕ್ಷಣ, ಇಂಧನ ಸೇರಿದಂತೆ ಇತರೆ ಇಲಾಖೆಗಳ ಮಳಿಗೆಗಳನ್ನು ಹಾಕಲಾಗಿದೆ.
ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆವೈಸಿ, ಮತದಾರರ ಗುರುತಿನ ಚೀಟಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಜಿಲ್ಲಾ ಸಮೀಕ್ಷಣಾ ಘಟಕ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಬ್ಯಾಂಕ್ ಸಾಲ, ಜೆಸ್ಕಾಂ, ಸೌಲಭ್ಯ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಿಬ್ಬಂದಿ ಸ್ಥಳದಲ್ಲಿ ಇದ್ದಾರೆ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಇತ್ಯರ್ಥಪಡಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.