ಚಿತ್ತಾಪುರ: ಕಲಗುರ್ತಿ ಗ್ರಾಮದಲ್ಲಿ ಕಳೆದ ಜು.16ರಂದು ಬಾಲಕಿ ಅಪಹರಣ ಪ್ರಕರಣ ಹಾಗೂ ಜು.20ರಂದು ದೇವಾನಂದ ರಾಮಚಂದ್ರ ಕೊರಬಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಡಬೂಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಬಾಲಕಿ ಅಪಹರಣ, ದೇವಾನಂದ ಸಾವಿನ ಪ್ರಕರಣದಲ್ಲಿ ಮಾಡಬೂಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಜಗನ್ನಾಥ (ಪ್ರಸ್ತುತ ನೆಲೋಗಿ ಪೊಲೀಸ್ ಠಾಣೆ), ಮಾಳಗೊಂಡ, ರಮೇಶ ಅವರನ್ನು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತನ ಮತ್ತು ಬೇಜಾಬ್ದಾರಿ ತೋರಿದ್ದಕ್ಕೆ ಅಮಾನತು ಮಾಡಲಾಗಿದೆ.
ಎರಡೂ ಪ್ರಕರಣಗಳ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕೋಲಿ, ಕಬ್ಬಲಿಗ ಸಮನ್ವಯ ಸಮಿತಿ ಮುಖಂಡರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ 45 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ನಡೆಸಿದ್ದರು.
ಕೋಲಿ ಸಮಾಜದ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಬಾಲಕಿ ಅಪಹರಣ ಪ್ರಕರಣದ ಆರೋಪಿ ಕಲಗುರ್ತಿ ಗ್ರಾಮದ ವ್ಯಕ್ತಿಯನ್ನು ಮಾಡಬೂಳ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಅದೇ ಗ್ರಾಮದ ದೇವಾನಂದ ಆತ್ಮಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.
45ನೇ ದಿನಗಳ ಕಾಲ ನಡೆದ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ನ್ಯಾಯ ಒದಗಿಸುವ ಭರವಸೆ ನೀಡಿದ ಬೆನ್ನೆಲ್ಲೇ ಮಾಡಬೂಳ ಠಾಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಅಮಾನತು ಆದೇಶ ಹೊರಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.