ಕಲ್ಯಾಣ ಕರ್ನಾಟಕವನ್ನು ನಿರ್ಲಕ್ಷಿಸಿಲ್ಲ: ಮುರುಗೇಶ್ ನಿರಾಣಿ

ಕಲಬುರಗಿ: ಅಭಿವೃದ್ಧಿ ವಿಚಾರದಲ್ಲಿ ಕಲ್ಯಾಣ ಕರ್ನಾಟಕವನ್ನು ನಿರ್ಲಕ್ಷಿಸಿಲ್ಲ. ಹೀಗಾಗಿ ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವುದು ಸಮಂಜಸವಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಇಲ್ಲಿನ ನಗರೇಶ್ವರ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ಷಿಕ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡುತ್ತಿದ್ದ ₹ 1500 ಕೋಟಿ ಜೊತೆಗೆ ಹೆಚ್ಚುವರಿಯಾಗಿ ₹ 1500 ಕೋಟಿ ಸೇರಿಸಿ ₹ 3 ಸಾವಿರ ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ವಿಮಾನಯಾನ ಮತ್ತು ರಕ್ಷಣಾ ಇಲಾಖೆಗೆ ಪೂರಕವಾಗಿ ಘಟಕ ಆರಂಭಿಸುವ ಚಿಂತನೆ ನಡೆದಿದೆ. ಜಿಲ್ಲೆಯಲ್ಲಿ ಟೆಕ್ಸ್ಟೈಲ್ ಪಾರ್ಕ್ ಆರಂಭಿಸಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಖಾಲಿ ಕೈಯಲ್ಲಿ ಹೋದರೆ ಏನೂ ಆಗಲ್ಲ: ಭೂಕಂಪನ ಪೀಡಿತ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡದಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಖಾಲಿ ಕೈಯಲ್ಲಿ ಅಲ್ಲಿಗೆ ಹೋದರೆ ಏನೂ ಸಾಧಿಸಿದಂತಾಗುವುದಿಲ್ಲ. ನಾನು ಅಲ್ಲಿಗೆ ಭೇಟಿ ನೀಡದೇ ಇದ್ದರೂ ನಿರಂತರವಾಗಿ ಮಾಹಿತಿಯನ್ನು ತರಿಸಿಕೊಂಡಿದ್ದೇನೆ. ಸಂಸದರು, ಶಾಸಕರು ಅಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಭೂಗರ್ಭಶಾಸ್ತ್ರಜ್ಞರು ಭೇಟಿ ನೀಡಿದ್ದಾರೆ. ಅವರ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶೀಘ್ರ ನಾನೂ ಭೇಟಿ ಕೊಡುತ್ತೇನೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.