ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮುಂಬರುವ ವರ್ಷವೂ ₹ 3 ಸಾವಿರ ಕೋಟಿ ಹಂಚಿಕೆ ಮಾಡಲಾಗುವುದು. ಕಲಬುರಗಿಯಲ್ಲಿ ಜವಳಿ ಪಾರ್ಕ್ಗೆ ಶೀಘ್ರ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಮಂಡಳಿಗೆ ಹಣ ಘೋಷಣೆ ಮಾಡಿತ್ತು. ಆದರೆ ಬಿಡುಗಡೆ ಮಾಡಿರಲಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ಘೋಷಿತ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದರು.
ಕಲಬುರಗಿ, ವಿಜಯಪುರದಲ್ಲಿ ಜವಳಿ ಪಾರ್ಕ್ ಆರಂಭಿಸಲಾದ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಎರಡೂ ಕಡೆ ಪಾರ್ಕ್ ಆರಂಭಕ್ಕೆ ಮಂಜೂರಾತಿ ನೀಡಲಿದ್ದು, ಶೀಘ್ರ ಕಲಬುರಗಿಗೆ ಮತ್ತೆ ಬಂದು ಅಡಿಗಲ್ಲು ಹಾಕಲಿದ್ದೇನೆ ಎಂದರು.
ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯು ಬಳ್ಳಾರಿಯಿಂದ ಕಲಬುರಗಿವರೆಗೆ ಅಭಿವೃದ್ಧಿ ಆಗಿಲ್ಲ. ಇದನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡು ನಾಲ್ಕು ಪಥದ ರಸ್ತೆಯನ್ನು ನಿರ್ಮಿಸಲಾಗುವುದು. ಇದರಿಂದ ಕಲಬುರಗಿಯಿಂದ ಬಳ್ಳಾರಿ ಮೂಲಕ ಬೆಂಗಳೂರಿಗೆ ತೆರಳುವವರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 2100 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಹೊಸದಾಗಿ 68 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಂಜೂರಾತಿ ನೀಡಲಾಗಿದೆ. 14 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತಲಾ ₹ 8 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಎರಡು ಹೊಸ ಯೋಜನೆಗಳನ್ನು ಘೋಷಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಪ್ರತಿ ಗ್ರಾಮದ ಒಂದೊಂದು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ₹ 10 ಲಕ್ಷ ನೆರವು ನೀಡಲಾಗುವುದು. ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಯುವ ಶಕ್ತಿ ಸಂಘಗಳಿಗೆ ₹ 1 ಲಕ್ಷ ನೆರವು ನೀಡಲಾಗುವುದು. ಜೊತೆಗೆ ಇವರು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.
ಕಲಬುರಗಿಯಲ್ಲಿ ಜವಳಿ ಪಾರ್ಕ್, ಬೀದರ್ ನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಸಂಶೋಧನೆಗೆ ಸಿಪೆಟ್, ರಾಯಚೂರು, ಕೊಪ್ಪಳದಲ್ಲಿ ವಿಮಾನ ನಿಲ್ದಾಣ ನಿರ್ಮಾಣ, ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಹಾಗೂ ಯಾದಗಿರಿಯಲ್ಲಿ ಫಾರ್ನಾಸ್ಯುಟಿಕಲ್ ಕೈಗಾರಿಕೆ ಆರಂಭಿಸಲಾಗುವುದು ಎಂದರು.
ಮಾನವ ಸಂಪನ್ಮೂಲ ಸಂಘಕ್ಕೆ ₹ 300 ಕೋಟಿ: ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ ಅವರು ಅಧ್ಯಕ್ಷರಾಗಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ₹ 300 ಕೋಟಿ ಅನುದಾನ ಮಂಜೂರು ಮಾಡಲಾಗುವುದು ಎಂದು ಘೋಷಿಸಿದರು.
ಇದಕ್ಕೂ ಮುನ್ನ ಹೈದರಾಬಾದ್ ಕರ್ನಾಟಕ ಭಾಗದ ವಿಮೋಚನೆಯ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ತೋಟಗಾರಿಕೆ ಮತ್ತು ಯೋಜನೆ ಹಾಗೂ ಸಾಂಖ್ಯಿಕ ಸಚಿವ ಮುನಿರತ್ನ, ಸಂಸದ ಡಾ.ಉಮೇಶ್ ಜಾಧವ್, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕೆಕೆಆರ್ ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ, ಕೃಷಿ ಮತ್ತು ಮಾನವ ಸಂಪನ್ಮೂಲ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಜಾಧವ, ವಿಧಾನಪರಿಷತ್ ಸದಸ್ಯರಾದ ಬಾಬುರಾವ ಚಿಂಚನಸೂರ, ಬಿ.ಜಿ. ಪಾಟೀಲ ಇತರರು ಇದ್ದರು.
ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.