ಕಲಬುರಗಿ: ‘ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರದ ಬಲವರ್ಧನೆಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಕೆಆರ್ಡಿಬಿ) ಮುಂದಿನ ಆರ್ಥಿಕ ವರ್ಷದಲ್ಲಿ ಆರೋಗ್ಯ ಆವಿಷ್ಕಾರ ಯೋಜನೆಯಡಿ ₹250 ಕೋಟಿ ಖರ್ಚು ಮಾಡಲಿದೆ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದರು.
ಇಲ್ಲಿನ ಕೆಕೆಆರ್ಡಿಬಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಲ್ಯಾಣ ಕರ್ನಾಟಕಕ್ಕೆ 70 ಪಿಎಚ್ಸಿ ಘೋಷಿಸಿದ್ದು, ಈ ವರ್ಷ 46 ಪಿಎಚ್ಸಿಗಳನ್ನು ನಿರ್ಮಾಣ ಮಾಡಲಾಗುವುದು. ಕೆಕೆಆರ್ಡಿಬಿಯು ತಲಾ ₹4.98 ಕೋಟಿ ವೆಚ್ಚದಲ್ಲಿ ಐದು ಜಿಲ್ಲೆಗಳಲ್ಲಿ ಒಟ್ಟು 33 ಪಿಎಚ್ಸಿ ಹಾಗೂ ವಿಜಯನಗರ ಮತ್ತು ಬಳ್ಳಾರಿಯಲ್ಲಿ ಜಿಲ್ಲಾ ಖನಿಜ ನಿಧಿಯಿಂದ (ಡಿಎಂಎಫ್) 13 ಪಿಎಚ್ಸಿ ನಿರ್ಮಿಸಲಾಗುವುದು’ ಎಂದರು.
‘17 ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಎಚ್ಸಿ) ತಲಾ ₹1 ಕೋಟಿ ನೀಡಲಾಗುವುದು. ಕಲಬುರಗಿ ಜಿಲ್ಲಾ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳನ್ನು ಒಂದೇ ಸೂರಿನಲ್ಲಿ ತರಲು ಜಯದೇಯ ಆಸ್ಪತ್ರೆ ಹಿಂಭಾಗದಲ್ಲಿ ಆರೋಗ್ಯ ಭವನ ನಿರ್ಮಿಸಲಾಗುವುದು. ಇದಕ್ಕೆ ಕೆಕೆಆರ್ಡಿಬಿ ₹10 ಕೋಟಿ ಹಾಗೂ ಆರೋಗ್ಯ ಇಲಾಖೆ ₹18 ಕೋಟಿ ನೀಡಲಿದೆ’ ಎಂದು ತಿಳಿಸಿದರು.
‘ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್ ಬಹುದೊಡ್ಡ ಆರೋಗ್ಯ ಸಮಸ್ಯೆಯಾಗಿದೆ. ಈ ಹಿಂದಿನ ವರ್ಷದಲ್ಲಿ 3.2 ಲಕ್ಷ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬಂದಿದ್ದು, ಅವರಲ್ಲಿ ಶೇ 50ರಷ್ಟು ಮಹಿಳೆಯರು ಮೃತಪಟ್ಟಿದ್ದಾರೆ. ಹೀಗಾಗಿ, ಆರೋಗ್ಯವಂತ ಮಹಿಳೆ ಯಾಗಲು ಮೆನ್ಸ್ಟ್ರುಅಲ್ ಕಪ್ ಅನ್ನು ಮಹತ್ವಾಕಾಂಕ್ಷಿ ಯೋಜನೆಯನ್ನಾಗಿ ಜಾರಿಗೆ ತರಲಾಗುವುದು. ಯಡ್ರಾಮಿ, ಸುರಪುರ ಮತ್ತು ಕಾರಟಗಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾ ಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕಾರಟಗಿ ಯಲ್ಲಿ ಜಾಗವೂ ಗುರುತಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ಕೆಕೆಆರ್ಡಿಬಿಗೆ ಬಂದ ₹3,000 ಕೋಟಿಯಲ್ಲಿ ಈಗಾಗಲೇ ₹1,500 ಕೋಟಿ ಖರ್ಚು ಮಾಡಲಾಗಿದ್ದು, ₹2,500 ಮೊತ್ತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ₹5,000 ಕೋಟಿ ಖರ್ಚು ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದರು.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆಗೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ‘ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಅದರಲ್ಲಿ ಏನಿದೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಪಡೆಯುತ್ತೇನೆ’ ಎಂದರು.
ಉಪಕಾರ್ಯದರ್ಶಿ ಎಂ.ಕೆ.ಪ್ರಮೀಳಾ, ಮಂಡಳಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರ ನಡೆಸಿದ ಅಭ್ಯಾಸವಿದೆ. ಹೀಗಾಗಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು ಒಬ್ಬೊಬ್ಬರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಸಿಎಂ ಅವರ ಆರೋಪ ನಿಜ ಆಗಿರಬಹುದುಡಾ.ಅಜಯ್ಸಿಂಗ್ ಕೆಕೆಆರ್ಡಿಬಿ ಅಧ್ಯಕ್ಷ
ಕಾಮಗಾರಿಗಳ ಮೇಲೆ ನಿಗಾ ಇರಿಸಲು ಗುಣಮಟ್ಟ ನಿಯಂತ್ರಣದ ಪ್ರತ್ಯೇಕ ಎಂಜಿನಿಯರಿಂಗ್ಎಂ.ಸುಂದರೇಶ ಬಾಬು, ಕೆಕೆಆರ್ಡಿಬಿ ಕಾರ್ಯದರ್ಶಿ
ವಿಭಾಗ ಸ್ಥಾಪಿಸಿ ಪ್ರತಿ ಜಿಲ್ಲೆಯಲ್ಲಿ ಉಪ ವಿಭಾಗ ಸ್ಥಾಪಿಸುವ ಚಿಂತನೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.