ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಸಮುದಾಯ ಕೆರೆ ವರದಾನ...

ಕೆರೆ ನಿರ್ಮಿಸಲು ತೋಟಗಾರಿಕೆ ಇಲಾಖೆ ಸಹಾಯಧನ ಲಭ್ಯ
Last Updated 9 ಫೆಬ್ರುವರಿ 2020, 19:30 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನಲ್ಲಿ ಪ್ರತಿ ವರ್ಷ ಮಳೆ ಕಡಿಮೆಯಾಗುತ್ತಿದೆ. ರೈತರ ಬಾವಿಗಳು ಮತ್ತು ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ಸನ್ನಿವೇಶದಲ್ಲಿ ಬಹು ವಾರ್ಷಿಕ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಸಮುದಾಯ ಕೆರೆಗಳು ರೈತರಿಗೆ ಬಹು ಉಪಯೋಗ ಆಗುತ್ತಿವೆ.

ತಾಲ್ಲೂಕಿನ ಬಾವಿ, ಕೊಳವೆಬಾವಿಗಳಲ್ಲಿ ಸಾಮಾನ್ಯವಾಗಿ ಜನವರಿಯಿಂದ ನೀರು ಬತ್ತತೊಡಗುತ್ತದೆ. ಆ ಸಮಯದಲ್ಲಿ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ರಕ್ಷಣೆ ಮಾಡುವುದಾಗಲೀ ಹೊಸ ಬೆಳೆಗಳನ್ನು ಬೆಳೆಯುವುದಾಗಲೀ ಸಾಧ್ಯವಾಗುತ್ತಿಲ್ಲ. ಆದರೆ ರೈತರು ಸಮುದಾಯ ಕೆರೆಗಳನ್ನು ನಿರ್ಮಾಣ ಮಾಡುವುದರಿಂದ ಬೇಸಿಗೆಯ ಹಂಗಾಮಿನ ಬೆಳೆ ಬೆಳೆಯಲು ಅನುಕೂಲ ಆಗುತ್ತದೆ.

ತಾಲ್ಲೂಕಿನ ಮಣ್ಣೂರು ಗ್ರಾಮದ ನಾಗಪ್ಪ ಕಲ್ಲಪ್ಪ ಕರೋಟಿ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನದಲ್ಲಿ ಸುಮಾರು 1 ಎಕರೆ ಜಮೀನಿನಲ್ಲಿ ಅಂದಾಜು ₹4 ಲಕ್ಷ ವೆಚ್ಚದಲ್ಲಿ ಸಮುದಾಯ ಕೆರೆಯನ್ನು ನಿರ್ಮಾಣ ಮಾಡಿಕೊಂಡು ಅದರಿಂದ ರೈತರು ಬೇಸಿಗೆ ಹಂಗಾಮಿನ ಬೆಳೆಗಳಾದ ಕಲ್ಲಂಗಡಿ, ಸೌತೆಕಾಯಿ ಹಾಗೂ ತರಕಾರಿ ಬೆಳೆಗಳನ್ನು ಬೆಳೆಯಲು ಆರಂಭಿಸಿದ್ದಾರೆ

‘ತೋಟಗಾರಿಕೆ ಇಲಾಖೆಯವರು ಸಮುದಾಯ ಕೆರೆಗಳ ನಿರ್ಮಾಣಕ್ಕೆ ಸಹಾಯಧನ ನೀಡುತ್ತಿರುವುದರಿಂದ ನಮಗೆ ಅನುಕೂಲ ಆಗುತ್ತದೆ. ಬೇಸಿಗೆಯಲ್ಲಿ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಅನುಕೂಲ ಆಗಿದೆ’ ಎಂದು ರೈತ ಮುಖಂಡರಾದ ಮಹಾದೇವಪ್ಪ ಕರೋಟಿ, ನಾಗಪ್ಪ ಕರೋಟಿ, ಬಸಲಿಂಗ ಹಳಿಮನಿ, ಮಲ್ಲಿಕಾರ್ಜುನ ಹತ್ತರಕಿ ಮಾಹಿತಿ ನೀಡಿದರು.

ಶಾಸಕ ಎಂ.ವೈ ಪಾಟೀಲ ಅವರು ಸಮುದಾಯ ಕೆರೆಗಳ ನಿರ್ಮಾಣ ಕುರಿತು ಮಾಹಿತಿ ನೀಡಿ, ‘ಸಮುದಾಯ ಕೆರೆಗಳ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಅನುದಾನ ನೀಡಲಾಗುವುದು ಎಂದರು.

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರಗೌಡ ಅವರು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ‘ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕ, ಪ್ಯಾಕ್‌ಹೌಸ್, ಜೇನು ಕೃಷಿ, ಸಂರಕ್ಷಿತ ಬೇಸಾಯ ಹಾಗೂ ಸಂಸ್ಕರಣ ಘಟಕ, ಶೈತ್ಯಾಗಾರ ಮತ್ತು ಹಣ್ಣು ಮಾಗಿಸುವ ಘಟಕಗಳಿಗೆ ಸಹಾಯಧನ ನೀಡಲಾಗುವುದು’ ಎಂದರು.

ಏನೇನು ಸೌಲಭ್ಯ

‘ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಕೊಯ್ಲೋತ್ತರ ನಿರ್ವಹಣೆಗಾಗಿ ಪ್ಯಾಕ್‌ ಹೌಸ್ ನಿರ್ಮಾಣ ಹಾಗೂ ಯಂತ್ರೋಪಕರಣ ಖರೀದಿಸಲು ಸಹಾಯಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಗುಚ್ಛ ಮಾದರಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕ, ಪ್ಯಾಕ್‌ಹೌಸ್ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT