ಕಲಬುರ್ಗಿ: ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದ ಬಿರುಸಿನ ಮಳೆ ಸುರಿಯುತ್ತಿದ್ದು, ಇದೇ 17ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜಿಟಿ ಜಿಟಿ ಸುರಿದ ಮಳೆ ಸಂಜೆಯ ಬಳಿಕ ಬಿರುಸು ಪಡೆದುಕೊಂಡಿತು.
ಹೀಗಾಗಿ ಪ್ರಧಾನ ಕಾರ್ಯಕ್ರಮ ನಡೆಯುವ ಡಿಎಆರ್ ಮೈದಾನ ಜಲಾವೃತವಾಗಿದ್ದು, ಶಾಮಿಯಾನ ಹಾಕುವ ಕಾರ್ಯಕ್ಕೂ ಅಡ್ಡಿಯಾಗಿದೆ.
ಇದೇ 17ರಂದು ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಬರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಿಗ್ಗೆ 9ಕ್ಕೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆದರೆ, ಭಾರಿ ಮಳೆಯಿಂದಾಗಿ ಮೈದಾನದಲ್ಲಿ ಸಭಿಕರಿಗೆ ಆಸನ ವ್ಯವಸ್ಥೆ ಕಲ್ಪಿಸುವುದು ಜಿಲ್ಲಾಡಳಿತಕ್ಕೆ ಸವಾಲಾಗಿದೆ.