ಕಲಬುರ್ಗಿ: ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥ ನಿರ್ಮಾಣವು ಉತ್ತಮವಾಗಿ ವಾಹನ ಚಾಲನೆ ಕಲಿಕೆಗೆ ಪೂರಕವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥ ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಿಸಿದರು.
ಸೋಮವಾರ ಕುಸನೂರು ರಸ್ತೆ (ರಿಂಗ್ ರಸ್ತೆ)ಯ ಹೊಸ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ಈಗಾಗಲೇ ಬೆಂಗಳೂರಿನಲ್ಲಿ ಎರಡು ಮತ್ತು ಮೈಸೂರಿನಲ್ಲಿ ಒಂದು ವಿದ್ಯುನ್ಮಾನ ಪರೀಕ್ಷಾ ಚಾಲನಾ ಪಥವನ್ನು ನಿರ್ಮಿಸಲಾಗಿದ್ದು, ಇದರ ಪ್ರಯೋಜನೆವನ್ನು ಸಾಕಷ್ಟು ಜನ ಪಡೆದಿದ್ದಾರೆ ಎಂದು ಹೇಳಿದರು.
ಬೆಳಗಾವಿ ಮತ್ತು ಧಾರವಾಡದಲ್ಲಿ ಸದ್ಯದಲ್ಲಿಯೇ ವಿದ್ಯುನ್ಮಾನ ಪಥಕ್ಕೆ ಚಾಲನೆ ನೀಡಲಾಗುವುದು. ತದನಂತರ ಎಲ್ಲಾ ಜಿಲ್ಲೆಗಳಲ್ಲೂ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದುಳಿದ ಜಿಲ್ಲೆ ಕಲಬುರ್ಗಿಯಲ್ಲಿ ₹ 4 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥ ನಿರ್ಮಿಸಲಾಗಿದೆ. ಅನಾಯಾಸವಾಗಿ, ಸರಳವಾಗಿ ಹಾಗೂ ಯಾವುದೇ ಗೊಂದಲವಿಲ್ಲದೆ ಲೈಸನ್ಸ್ ಪಡೆದುಕೊಳ್ಳಬಹುದಾಗಿದೆ. ಕಲಬುರ್ಗಿ ಜಿಲ್ಲೆಯ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರಿನ ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ್ (ರಾಜುಗೌಡ), ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಶಾಸಕರಾದ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಸಜ್ಜನ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎನ್. ಶಿವಕುಮಾರ್, ಜಿಲ್ಲಾಧಿಕಾರಿ ವಿಜಯಾ ಜ್ಯೋತ್ಸ್ನಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ರಾಜಾ ಪಿ, ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಹೆಚ್ಚುವರಿ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್ ಹಾಗೂ ಕಲಬುರ್ಗಿ ವಿಭಾಗದ ಜಂಟಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.