ಚಿಂಚೋಳಿ(ಕಲಬುರ್ಗಿ ಜಿಲ್ಲೆ): ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಶುಕ್ರವಾರ ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್ ಪೀಡಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ಸೋಂಕಿತರು ಸವಲತ್ತುಗಳಿಂದ ವಂಚಿತರಾಗಬಾರದು. ಅಗತ್ಯವಿರುವುದನ್ನು ಮೊದಲೇ ಸಂಗ್ರಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಸ್ಪತ್ರಗೆ ದಾಖಲಾದವರು ಮತ್ತು ಬಿಡುಗಡೆಯಾದವರ ಸಂಖ್ಯೆ, ಲಭ್ಯವಿರುವ ಔಷಧಿ, ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಲಭ್ಯವಿದೆ ಎಂಬ ಮಾಹಿತಿಯನ್ನು ನಿತ್ಯವೂ ಇಲಾಖೆಯ ಇಲ್ಲವೆ ಜಿಲ್ಲೆಯ ವೆಬ್ ಸೈಟ್ಗೆ ಅಪ್ಲೋಡ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾಗಿದ್ದ ಮಾಜಿ ಸಚಿವ ದಿ. ವೈಜನಾಥ ಪಾಟೀಲ ಅವರ ಸಮಾಧಿಗೂ ಸಚಿವರು ಭೇಟಿ ನೀಡಿದರು.
ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಡಾ. ಅವಿನಾಶ್ ಜಾಧವ, ರಾಜಕುಮಾರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ. ಪಾಟೀಲ ಉಪಸ್ಥಿತರಿದ್ದರು.