ಕಲಬುರಗಿ: ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಆರ್.ಜಿ.ಶೆಟಗಾರ ಒತ್ತಾಯಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಅಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದರು. ಶರಣರ ನಾಡಿನ ಈ ಭೂಮಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರು ಇಡುವುದು ಸೂಕ್ತ ಎಂದರು.
ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಮಹಾದಾಸೋಹಿ ಶರಣಬಸವೇಶ್ವರರ ಹೆಸರು ಇಡಬೇಕು.ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ. ಇದು ಹೀಗೆಯೇ ಮುಂದುವರಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಕಲ್ಯಾಣ ಪರ್ವದ ಮೆರವಣಿಗೆಯಲ್ಲಿ ಚಪ್ಪಲಿ ಪ್ರದರ್ಶನ ಮಾಡಿದ್ದು ಖಂಡನೀಯ. ಅಂಥಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ಪ್ರಧಾನ ಕಾರ್ಯದರ್ಶಿ ರಮೇಶ ದುತ್ತರಗಿ, ಉಪಾಧ್ಯಕ್ಷ ಹಣಮಂತರಾವ್ ಪಾಟೀಲ ಕುಸನೂರ, ಶಶಿಕಾಂತ ಪಸಾರ, ಡಿ.ಶಿವಪ್ಪ, ಎಂ.ಎಲ್.ಅಲಂಕಾರ, ಬಸವಂತರಾಯ ಏರಿ, ಅಶೋಕ ಘೂಳಿ ಇದ್ದರು.