ಕಲಬುರ್ಗಿ: ‘ಸಾರಿಗೆ ಇಲಾಖೆಯ ಕೆಎಸ್ಆರ್ಟಿಸಿ, ಎನ್ಇಕೆಆರ್ಟಿಸಿ, ಬಿಎಂಟಿಸಿ ಹಾಗೂ ಎನ್ಡಬ್ಲೂಕೆಆರ್ಟಿಸಿ ಸಿಬ್ಬಂದಿಯ ವೇತನ ನೀಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ’ ಎಂದು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ತಿಳಿಸಿದ್ದಾರೆ.
‘ಕೊರೊನಾ ಲಾಕ್ಡೌನ್ನಿಂದಾಗಿ ಮೂರು ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗಿತ್ತು. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದ ಕಾರಣ ಸಿಬ್ಬಂದಿ ವೇತನ ನೀಡಿರಲಿಲ್ಲ. ಇದರಿಂದ ನೌಕರರ ಸ್ಥಿತಿ ಸಂಕಷ್ಟಕ್ಕೆ ಸಿಲುಕಿತ್ತು. ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಾಲ್ಕು ನಿಗಮ ಅಧ್ಯಕ್ಷರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೆಟಿ ಮಾಡಿದೆವು. ಸಿಬ್ಬಂದಿಗೆ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ವೇತನ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು. ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ₹ 634.5 ಕೋಟಿ ಹಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
‘ದೀಪಾವಳಿ ಹಬ್ಬದ ದಿನ ರಾಜ್ಯದ ಸುಮಾರು 1.30 ಲಕ್ಷ ಸಿಬ್ಬಂದಿಗೆ ಕೊಡುಗೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಹಾಗೂ ಸಾರಿಗೆ ಉಪಮುಖ್ಯ ಮಂತ್ರಿ ಲಕ್ಷ್ಮಣ ಸವದಿಗೂ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ತೆಲ್ಕೂರ ತಿಳಿಸಿದ್ದಾರೆ.