ಕಲಬುರಗಿ: ಕಳೆದ ಮೂರು ತಿಂಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಕೂಲಿ ಬಾಕಿ ಉಳಿಸಿಕೊಂಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಕ್ರಮ ಖಂಡಿಸಿ ಮೋದಿ ಗೋ ಬ್ಯಾಕ್ ಘೋಷಣೆ ಕೂಗಿದ ಸಿಪಿಎಂ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ನಗರಕ್ಕೆ ಮಧ್ಯಾಹ್ನ 1ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಿಪಿಎಂ ಕಾರ್ಯಕರ್ತರು ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಆದರೂ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮೋದಿ ಅವರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
'ಸಾವಿರಾರು ಕೋಟಿ ರೂಪಾಯಿ ನರೇಗಾ ಕೂಲಿ ಬಾಕಿ ಉಳಿಸಿಕೊಂಡಿರುವ ಮೋದಿ ಅವರೇ ಯಾವ ಮುಖ ಇಟ್ಟುಕೊಂಡು ಕಲಬುರಗಿಗೆ ಬರುತ್ತಿದ್ದೀರಿ" ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಚುನಾವಣಾ ಬಾಂಡ್ ನಲ್ಲಿ ಮೋದಿ ಹಾಗೂ ಅವರ ಪಕ್ಷ ಸಾವಿರಾರು ಕೋಟಿ ಲೂಟಿ ಹೊಡೆದಿದೆ. ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಕೂಗಿದರು.
ತಕ್ಷಣ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದೊಯ್ದರು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಭೀಮಶೆಟ್ಟಿ ಯಂಪಳ್ಳಿ, ಪಾಂಡುರಂಗ ಮಾವಿನಕರ, ಸುಧಾಮ ಧನ್ನಿ, ಲವಿತ್ರ ವಸ್ತ್ರದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.