ಕಲಬುರ್ಗಿ: ಉಪಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬಸವ ಕಲ್ಯಾಣಕ್ಕೆ ತೆರಳಲು ಬೆಂಗಳೂರಿನಿಂದ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಸವ ಕಲ್ಯಾಣದಲ್ಲಿ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಅಸಮಾಧಾನಗಳು ಉಂಟಾಗುವುದು ಸಹಜ. ಟಿಕೆಟ್ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಮಲ್ಲಿಕಾರ್ಜುನ ಖೂಬಾ ಅವರೊಂದಿಗೆ ಮಾತನಾಡುತ್ತೇನೆ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ಆಡಳಿತಕ್ಕಿಂತಲೂ ಅತ್ಯುತ್ತಮವಾಗಿದೆ. ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ 52 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.