ಕಲಬುರ್ಗಿ: ಮಧ್ಯಪ್ರದೇಶದ ಮಂಡಸೌರನಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್), ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.
ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಾಡಹಗಲೇ ಅಪಹರಿಸಿ ಅತ್ಯಾಚಾರವೆಸಗಲಾಗಿದೆ. ಮಹಿಳೆಯರಿಗೆ ಶಾಲೆ, ಕಾಲೇಜು, ಉದ್ಯೋಗದ ಸ್ಥಳದಲ್ಲಿ ಸುರಕ್ಷತೆ ಇಲ್ಲದಂತಾಗಿದೆ. ಶೀಘ್ರಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಮಧ್ಯಪ್ರದೇಶದ ಮಂಡಸೌರ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ವರದಿಯಾದ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಖಂಡನೀಯ. ಇಂತಹ ಘಟನೆಗಳನ್ನು ದುರುಪಯೋಗಪಡಿಸಿಕೊಂಡು ಕೆಲವರು ಕೋಮುವಾದಿ ರಾಜಕೀಯ ಮಾಡುತ್ತಿರುವುದನ್ನು ರಾಜ್ಯದ ಜನತೆ ಖಂಡಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಪ್ರಬಲ ಹೋರಾಟಗಳನ್ನು ಬೆಳೆಸಲು ಎಲ್ಲರೂ ಕೈಜೋಡಿಸಬೇಕು. ಮಾಧ್ಯಮಗಳಲ್ಲಿ ಅಶ್ಲೀಲತೆಯ ಪ್ರಸಾರವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ನಿಂಗಣ್ಣ ಜಂಬಗಿ, ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಡಾ.ಸೀಮಾ ದೇಶಪಾಂಡೆ, ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿನಾಥ ಸಿಂಘೆ, ಭೀಮಾಶಂಕರ ಪಾಣೇಗಾಂವ, ಹಣಮಂತ ಎಸ್.ಎಚ್., ಈರಣ್ಣ ಇದ್ದರು.