ಕಲಬುರಗಿ: ‘ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದಿಂದ ಬರ ಪರಿಹಾರಕ್ಕೆ ಒತ್ತಾಯಿಸಿ ಜನವರಿ 8ರಂದು ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪಾ ಹೊಸ್ಕೆರಾ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಅಥವಾ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು’ ಎಂದು ಹೇಳಿದರು.
‘ರಾಜ್ಯದಲ್ಲಿ ಬರಗಾಲದಿಂದ 223 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಜನ ಕೆಲಸವಿಲ್ಲದೆ ಮಹಾರಾಷ್ಟ್ರಕ್ಕೆ ಗುಳೆ ಹೊರಟಿದ್ದಾರೆ. ಆದರೆ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ವಿತರಣೆ ಮಾಡದೆ ಕೂಲಿಕಾರರನ್ನು ಸಂಕಷ್ಟಕ್ಕೆ ದೂಡಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಬರಗಾಲದ ಅಡಿಯಲ್ಲಿ ವಿಶೇಷ ಅನುದಾನ ನೀಡಿ ಉದ್ಯೋಗ ಖಾತ್ರಿಯಡಿ ಕಾಮಗಾರಿ ಆರಂಭಿಸಬೇಕು. ಪ್ರತಿ ಕಾರ್ಮಿಕರಿಗೆ ಎರಡು ನೂರು ದಿನ ಕೆಲಸ ನೀಡಬೇಕು ಹಾಗೂ ದಿನಕ್ಕೆ ₹600 ವೇತನ ನೀಡಬೇಕು’ ಎಂದು ಆಗ್ರಹಿಸಿದರು.
‘ಕೂಲಿಕಾರರಿಗೆ ಕೆಲಸವಿಲ್ಲದೆ ಸಮಸ್ಯೆಗೆ ಸಿಲುಕಿದ್ದಾರೆ. ಬ್ಯಾಂಕ್ಗಳಲ್ಲಿ ಪಡೆದ ಸಾಲಮನ್ನಾ ಮಾಡಬೇಕು. ಬರಗಾಲದಲ್ಲಿ ಯಂತ್ರಗಳ ಕೆಲಸ ನಿಲ್ಲಿಸಿ ಕಾರ್ಮಿಕರಿಗೆ ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಡೆಯಬೇಕು’ ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮೇಘರಾಜ ಕಠಾರೆ, ಕಾಶಿನಾಥ ಬಂಡಿ, ಗುರುನಂಜೇಶ್ ಕೋಣಿನ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.