ಕಲಬುರಗಿ: ಪಿಎಸ್ಐ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಸಂಸದ ಡಾ.ಉಮೇಶ ಜಾಧವ ಅವರು ನಿಂತಿರುವ ಫೋಟೊ ಬಹಿರಂಗವಾಗಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.
ಕೆಪಿಸಿಸಿ ಕಾನೂನು ವಿಭಾಗದ ಉಪಾಧ್ಯಕ್ಷ ಎನ್. ದಿವಾಕರ್, ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬೆಂಗಳೂರಿನ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ವಿರುದ್ದ ತನಿಖೆ ನಡೆಯುತ್ತಿದ್ದು, ಹಲವಾರು ಷರತ್ತುಗಳ ಮೇಲೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಹೀಗಿರುವಾಗ ಬಿಜೆಪಿ ಅಭ್ಯರ್ಥಿ ಆರೋಪಿಯನ್ನು ಭೇಟಿಯಾಗಿ ಅವರೊಂದಿನ ಫೋಟೊಗಳನ್ನು ಹಂಚಿಕೊಂಡಿದ್ದು ನ್ಯಾಯಾಲಯದ ಷರತ್ತುಗಳ ಉಲ್ಲಂಘನೆ ಮಾಡಿರುವುದರ ಜೊತೆಗೆ ಪ್ರಭಾವ ಬಳಸಿಕೊಂಡು ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸುವ ಬಗ್ಗೆ ಕಾಂಗ್ರೆಸ್ ಗೆ ಶಂಕೆ ವ್ಯಕ್ತವಾಗಿದೆ ಎಂದು ದೂರಿನಲ್ಲಿ ತಿಳಿಸಿದೆ.
'ಆರೋಪಿಯನ್ನು ಭೇಟಿ ಮಾಡಿ ಬೆಂಬಲ ಕೇಳುವ ಲಜ್ಜೆಗೆಟ್ಟ ನಡವಳಿಕೆಗಳು ಕಾನೂನಿನ ಪಾವಿತ್ರ್ಯ ಹಾಳುಮಾಡುವುದು ಮಾತ್ರವಲ್ಲ ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಹಾಳುಮಾಡುತ್ತದೆ. ಹೀಗಾಗಿ, ಚುನಾವಣಾ ಆಯೋಗ ಕೂಡಲೇ ಮಧ್ಯೆ ಪ್ರವೇಶಿಸಿ ಕಾನೂನು ವ್ಯವಸ್ಥೆಯ ಪಾವಿತ್ರ್ಯತೆ ಮತ್ತು ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.