ಕಲಬುರ್ಗಿ: ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪೋಷಕರಿಗೆ ಮನವಿ ಮಾಡಿದರು.
ನಗರದ ಜಗತ್ ಪ್ರದೇಶದಲ್ಲಿರುವ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷದ ಮೊದಲ ಸುತ್ತಿನ ರಾಷ್ಟ್ರಿಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೊ ಹನಿ ಹಾಕಿ ಅವರು ಮಾತನಾಡಿದರು.
ಸರ್ಕಾರ ನೀಡುತ್ತಿರುವ ಲಸಿಕೆಯು ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ. ಸಂಪೂರ್ಣ ಸುರಕ್ಷಿತವಾಗಿದೆ. ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಬಂದು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿರಿ ಎಂದರು.
ಇದಲ್ಲದೆ ಮುಂದಿನ ಮೂರು ದಿನಗಳ ಕಾಲ ಮನೆ-ಮನೆ ಭೇಟಿ ನೀಡಿ ಲಸಿಕೆ ನೀಡಲಾಗುವುದು. ಅಲ್ಲಿಯೂ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬಹುದು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಮಾತನಾಡಿ, 2014ರಲ್ಲಿಯೇ ಪೋಲಿಯೊ ಮುಕ್ತವಾಗಿರುವ ಭಾರತಕ್ಕೆ ನೆರೆಯ ದೇಶಗಳಿಂದ ಪೋಲಿಯೊ ಹರಡುವ ಭೀತಿಯಿದೆ. ಆದ್ದರಿಂದ 2021ರಲ್ಲಿ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ 5,64,894 ಮನೆಗಳಿಗೆ ಆರೋಗ್ಯ ಸಿಬ್ಬಂದಿ ಭೇಟಿ ನೀಡಲಿದ್ದು, ನಾಲ್ಕು ದಿನಗಳ ಈ ಕಾರ್ಯಕ್ರಮಕ್ಕೆ 1,490 ಬೂತ್ ರಚನೆ ಮಾಡಲಾಗಿದೆ. 129 ಟ್ರಾನ್ಸಿಟ್ ತಂಡ ಹಾಗೂ 29 ಸಂಚಾರಿ ತಂಡಗಳನ್ನು ರಚಿಸಲಾಗಿದೆ. ಈ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಒಟ್ಟು 1,648 ತಂಡಗಳನ್ನು ರಚಿಸಲಾಗಿದ್ದು, 3,296 ಆರೋಗ್ಯ ಸಿಬ್ಬಂದಿ ಇದರಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ವಿವರಿಸಿದರು.
ಜ್ಯೋತ್ಸ್ನಾ ಅವರು ತಮ್ಮ ಮಗಳಿಗೆ ಲಸಿಕೆ ಹಾಕಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಅವರು ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಶೋಭಾ ಸಿರಸಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ಪಾಟೀಲ, ರಾಷ್ಟ್ರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ರಾಜ್ಯ ನೋಡಲ್ ಅಧಿಕಾರಿ ಓಂ ಪ್ರಕಾಶ ಕೆ. ಕಟ್ಟಿಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎ.ಎಸ್. ರುದ್ರವಾಡಿ, ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾಧಿಕಾರಿ ಡಾ. ಅನಿಲಕುಮಾರ್ ತಾಳಿಕೋಟಿ, ಭಾರತೀಯ ಮಕ್ಕಳ ಸಂಘದ ಅಧ್ಯಕ್ಷೆ ಡಾ. ವಾಣಿಶ್ರೀ ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರಕುಮಾರ ನಾಗಲೀಕರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ವಿವೇಕಾನಂದ ರೆಡ್ಡಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಶಿವಕುಮಾರ ದೇಶಮುಖ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜಕುಮಾರ ಎ.ಕುಲಕರ್ಣಿ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ. ಶರಣಬಸಪ್ಪಾ ಗಣಜಲಖೇಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ. ಶಿವಶರಣಪ್ಪ ಹಾಗೂ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಪ್ರಭುಲಿಂಗ ಕೆ. ಮಾನಕರ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.