ಕಲಬುರಗಿ: ‘ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡುವುದು ಸೇರಿ ಹಲವು ಜನಪರ ಕಾರ್ಯಗಳನ್ನು 129ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲಿ ನಿರಂತರವಾಗಿ ಮಾಡುವ ಮೂಲಕ ರೆಡ್ ಕ್ರಾಸ್ ಸಂಸ್ಥೆ ವಿಶ್ವದ ಅಭಿವೃದ್ಧಿಗೆ ಅನನ್ಯವಾದ ಕೊಡುಗೆಯನ್ನು ನೀಡುತ್ತಿದೆ‘ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅಭಿಪ್ರಾಯಪಟ್ಟರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ವಿದ್ಯಾಮಂದಿರ’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಜರುಗಿದ ‘ವಿಶ್ವ ರೆಡ್ ಕ್ರಾಸ್ ಸಂಸ್ಥೆ ದಿನಾಚರಣೆ’, ಜೆಆರ್ಸಿಯ ನೂತನ ಎರಡು ಘಟಕಗಳ ಉದ್ಘಾಟನೆ ಮತ್ತು ಸದಸತ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೆಡ್ ಕ್ರಾಸ್ ಸಂಸ್ಥೆ ಸದಸ್ಯ ಜಯಪ್ರಕಾಶ ಕಟ್ಟಿಮನಿ ಮಾತನಾಡಿ, ‘ಶಾಂತಿ ಕಾಪಾಡುವ, ಗಾಯಗೊಂಡ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ, ಆಕಸ್ಮಿಕ ಮರಣದ ಪ್ರಮಾಣವನ್ನು ತಗ್ಗಿಸುವ, ಸಮುದಾಯದ ಅಭಿವೃದ್ಧಿಯಲ್ಲಿ ತೊಡಗುವ ಮೂಲಕ ರೆಡ್ಕ್ರಾಸ್ ಉತ್ತಮ ಕೆಲಸ ಮಾಡುತ್ತಿದೆ’ ಎಂದರು.