ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ: ಪರಿಹಾರಕ್ಕೆ ಆರ್‌ಕೆಎಸ್‌ ಆಗ್ರಹ

Last Updated 26 ನವೆಂಬರ್ 2021, 1:30 IST
ಅಕ್ಷರ ಗಾತ್ರ

ಕಲಬುರಗಿ: ರಾಜ್ಯದಲ್ಲಿ ಎರಡು ತಿಂಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರೈತರು ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡಿದ್ದಾರೆ. ಮನೆಗಳನ್ನು ಕಳೆದುಕೊಂಡವರಿಗೆ ಪುನರ್ವಸತಿ ಮತ್ತು ಮೃತರ ಕುಟಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ರೈತ ಕೃಷಿ ಕಾರ್ಮಿಕರ ಸಂಘಟನೆ (ಆರ್‌ಕೆಎಸ್‌) ರಾಜ್ಯ ಘಟಕದ ಅಧ್ಯಕ್ಷ ಡಾ.ಟಿ.ಎಸ್.ಸುನೀತ್ ಕುಮಾರ ಮತ್ತು ರಾಜ್ಯ ಕಾರ್ಯದರ್ಶಿ ಎಚ್.ವಿ. ದಿವಾಕರ್ ಆಗ್ರಹಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹವಾಮಾನ ವೈಪರೀತ್ಯದಿಂದಾಗಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಶೇಂಗಾ, ರಾಗಿ, ಜೋಳ, ತೊಗರಿ, ಮೆಣಸಿನಕಾಯಿ, ತರಕಾರಿ, ತೆಂಗು, ಅಡಿಕೆ, ಮೆಣಸಿನ ಬೆಳೆಗಳು ಸಂಪೂರ್ಣ ನಾಶವಾಗಿವೆ. ತೋಟಗಾರಿಕೆಯ ಬೆಳೆಗಳು ನಿಂತ ನೀರಿನಲ್ಲೇ ಕೊಳೆಯುತ್ತಿವೆ. ಹಸಿಬರದಿಂದಾಗಿ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ತೀವ್ರವಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಮಳೆಯಿಂದಾಗಿ ಸಾವಿರಾರು ಮನೆಗಳು ಬಿದ್ದು ಹೋಗಿವೆ. ಜನ ಸೂರು ಕಳೆದುಕೊಂಡು ಮಳೆಯಲ್ಲಿ ಬೀದಿಗೆ ಬಂದಿದ್ದಾರೆ. ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಸರ್ಕಾರ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಿ ಕುಳಿತಿದೆ. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಹಾನಿಯ ಸಮೀಕ್ಷೆ ಆಮೆಯಂತೆ ನಡೆಯುತ್ತಿದೆ. ಸರ್ಕಾರ ಒಂದಷ್ಟು ಪರಿಹಾರದ ಹಣ ಬಿಡುಗಡೆಯಾಗಿದೆ ಎಂದು ಹೇಳುತ್ತಿದೆ. ಬೆಳೆ ನಷ್ಟಕ್ಕೆ ಮತ್ತು ಮನೆ ಹಾನಿಗೆ ನಿಗದಿಪಡಿಸಿರುವ ಮೊತ್ತ ಚಿಲ್ಲರೆ ದುಡ್ಡಷ್ಟೇ. ಅದೂ ಕೂಡ ಬರುವುದೆಂದು? ಅಲ್ಲಿಯವರೆಗೆ ಜನ ಕಾಯಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.

‘ಸರ್ಕಾರ ಕೂಡಲೇ ಮಳೆ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ, ಬೆಳೆ ನಷ್ಟ ಪರಿಹಾರ ನೀಡಬೇಕು. ಹಾನಿಗೊಳಗಾದ ಮನೆಗಳನ್ನು ದುರಸ್ತಿ ಮಾಡಬೇಕು. ಪೂರ್ಣ ಹಾಳಾಗಿದ್ದರೆ ಹೊಸದಾಗಿ ಮನೆ ನಿರ್ಮಿಸಿ ಕೊಡಬೇಕು. ಸಾವಿಗೀಡಾದವರ ಕುಟುಂಬಗಳಿಗೆ ಶೀಘ್ರವಾಗಿ ಪರಿಹಾರ ನೀಡಬೇಕು. ಕೆರೆಗಳನ್ನು ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT