ಕಲಬುರಗಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ಅಧ್ಯಯನ ಮಾಡಿ, ಪಠ್ಯ, ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಬೇಕು. ಜೀವನ ರೂಪಿಸಿಕೊಳ್ಳುವ ಜೊತೆಗೆ ಶಾಲೆಗೆ ಕೀರ್ತಿ ತರಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ದಾಕ್ಷಾಯಣಿ ಎಸ್.ಅಪ್ಪ ಹೇಳಿದರು.
ನಗರದ ಚಂದ್ರಕಾಂತ ಪಾಟೀಲ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ 35ನೇ ವಾರ್ಷಿಕೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳ ಭವಿಷ್ಯಕ್ಕೆ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳು ಉತ್ಸಾಹ ತುಂಬುವ ಜೊತೆಗೆ ಚೈತನ್ಯ ಮೂಡಿಸುತ್ತವೆ’ ಎಂದರು.
ವಿಧಾನ ಪರಿಷತ್ ಸದಸ್ಯ, ಸಂಸ್ಥೆ ಅಧ್ಯಕ್ಷ ಬಿ.ಜಿ.ಪಾಟೀಲ ಮಾತನಾಡಿ, ‘ಉತ್ತಮ ಶಿಕ್ಷಣ ನೀಡುವಲ್ಲಿ ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಆಟ, ಪಾಠಕ್ಕೆ ಆದ್ಯತೆ ನೀಡಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಎಸ್.ಬಿ.ಪಾಟೀಲ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಚಂದು ಪಾಟೀಲ ಮಾತನಾಡಿದರು. ಕಾರ್ಯಕಾರಿ ನಿರ್ದೇಶಕ ಕೈಲಾಶ ಬಿ.ಪಾಟೀಲ, ಸುಹಾಸ ಪಾಟೀಲ, ವೀರಮ್ಮ ಜಿ.ಪಾಟೀಲ, ಸುರೇಖಾ ಬಿ.ಪಾಟೀಲ, ಪ್ರಿಯಾಂಕಾ ಸಿ.ಪಾಟೀಲ, ಜಯಶ್ರೀ ಎ.ಪಾಟೀಲ, ಶ್ವೇತಾ ಕೆ.ಪಾಟೀಲ ಪಾಲ್ಗೊಂಡಿದ್ದರು.
ಪ್ರಾಂಶುಪಾಲ ಕೆ.ರವಿಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಾಂಶುಪಾಲ ಆಕಾಶ ಹುಬಾಳೆ ವಂದಿಸಿದರು. ಶಾಲೆಯ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.