ಕೋಲಾರ: ತಾಲ್ಲೂಕು ಹಾಗೂ ನಗರದ ವಿವಿಧ ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಸಂಘ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರ 69ನೇ ಗಣ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಜ್ಯ ಅಸಂಘಟಿತ ಕಾರ್ಮಿಕರ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪರಿಷತ್ನ ಅಧ್ಯಕ್ಷ ಕೆ.ವಿ.ಸುರೇಶ್ಕುಮಾರ್, ‘ಮಹಾತ್ಮ ಗಾಂಧೀಜಿ ದೇಶವನ್ನು ಬ್ರಿಟಿಷರ ಆಡಳಿತದಿಂದ ದಾಸ್ಯ ಮುಕ್ತಗೊಳಿಸಿದರು. ಸತ್ಯಾಗ್ರಹ ಚಳವಳಿಯಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿತು’ ಎಂದು ಹೇಳಿದರು.
ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚಿಸಿ 1950ರ ಜ.26ರಂದು ಸಂಸತ್ನಲ್ಲಿ ಸ್ವೀಕಾರ ಮಾಡಲಾಯಿತು. ದೇಸಿ ರಾಜರಿಂದ ರಾಜ್ಯಗಳನ್ನು ವಶಪಡಿಸಿಕೊಂಡು ಒಕ್ಕೂಟ ವ್ಯವಸ್ಥೆ ಸ್ವೀಕಾರ ಮಾಡಿದ ದಿನವನ್ನು ಗಣ ರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ ಎಂದರು. ತಾಲ್ಲೂಕು ತ್ರಿಚಕ್ರ ವಾಹನ ಚಾಲಕರ ಸಂಘದ ಅಧ್ಯಕ್ಷ ಕೆ.ನಾರಾಯಣಸ್ವಾಮಿ, ಸಹಕಾರ ಸಂಘದ ಉಪಾಧ್ಯಕ್ಷ ಎನ್.ಅಮ್ಜದ್ ಪಾಷಾ ಪಾಲ್ಗೊಂಡಿದ್ದರು.
ಸಂಕಲ್ಪ ಮಾಡಬೇಕು: ಹೇಮಾದ್ರಿ ವಿದ್ಯಾಸಂಸ್ಥೆಯಲ್ಲಿ ಧ್ವಜಾರೋಹಣ ಮಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಬಿ.ಮುನಿವೆಂಕಟಪ್ಪ, ‘ರಾಷ್ಟ್ರವನ್ನು ಕಾಡುತ್ತಿರುವ ಸಮಸ್ಯೆಗಳ ನಿರ್ಮೂಲನೆಗೆ ಮತ್ತು ರಾಷ್ಟ್ರದ ಭದ್ರತೆಗೆ ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು’ ಎಂದು ಕರೆ ನೀಡಿದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಬಿ.ಇಡಿ ಕಾಲೇಜು ಪ್ರಾಂಶುಪಾಲ ಜೆ. ಶ್ರೀನಿವಾಸಶೆಟ್ಟಿ, ಐಟಿಐ ಕಾಲೇಜು ಪ್ರಾಂಶುಪಾಲ ಶ್ರೀಕಾಂತ್ ಪಾಲ್ಗೊಂಡಿದ್ದರು.
ನೆಹರೂ ಯುವ ಕೇಂದ್ರದಲ್ಲಿ ಶಾಂತಿ ಸೌಹಾರ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ಎಚ್.ಶಾಂತಮ್ಮ ಮಾತನಾಡಿ, ‘ಹಲವು ಪ್ರಾಂತ್ಯಗಳಾಗಿ ಹಂಚಿ ಹೋಗಿದ್ದ ಭಾರತ ದೇಶವನ್ನು ಸಂವಿಧಾನಬದ್ಧ ರಾಜ್ಯಗಳಾಗಿ 1950ರ ಜ.26ರಂದು ಒಗ್ಗೂಡಿಸಲಾಯಿತು’ ಎಂದು ಹೇಳಿದರು.
ನಾಗತೇಜ ಕ್ರೀಡೆ ಮತ್ತು ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ನೆಹರೂ ಯುವ ಕೇಂದ್ರದ ಸಹಾಯಕ ನಿರ್ದೇಶಕಿ ನರಸಮ್ಮ ಹಾಜರಿದ್ದರು. ಎಕ್ಸಲೆಂಟ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿ ಎಂ.ಎನ್.ನಾರಾಯಣಸ್ವಾಮಿ ಧ್ವಜಾರೋಹಣ ನೆರವೇರಿಸಿ ದರು. ಕೇಂದ್ರದ ಅಧ್ಯಕ್ಷ ಆರ್.ಲಕ್ಷ್ಮೀನಾರಾ ಯಣ, ಸಂಪನ್ಮೂಲ ವ್ಯಕ್ತಿಗಳಾದ ಚಂದ್ರು, ಸುನಿಲ್ ಭಾಗವಹಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಘಟಕದ ಕಚೇರಿ, ಟಮಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಜಿಲ್ಲಾ ಸಹಕಾರಿ ಒಕ್ಕೂಟ ಪುರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣ ರಾಜ್ಯೋತ್ಸವ ಆಚರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.