ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂ–ಮುಸ್ಲಿಂ ಘರ್ಷಣೆ: ಅಂಕಲಗಾ ಗ್ರಾಮದಲ್ಲಿ ಬಿಗಿ ಬಂದೋಬಸ್ತ್

Published 27 ನವೆಂಬರ್ 2023, 16:39 IST
Last Updated 27 ನವೆಂಬರ್ 2023, 16:39 IST
ಅಕ್ಷರ ಗಾತ್ರ

ಜೇವರ್ಗಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಅಂಕಲಗಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ನವೀಕರಣಗೊಳಿಸಲಾಗುತ್ತಿದ್ದ ಕಟ್ಟಡಕ್ಕೆ ಸಂಬಂಧಪಟ್ಟಂತೆ ಹಿಂದೂ– ಮುಸ್ಲಿಮರ ನಡುವೆ ಸೋಮವಾರ ಘರ್ಷಣೆ ಉಂಟಾಗಿ ಕೆಲವರು ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಗ್ರಾಮದ ಚಾವಡಿ ಕಟ್ಟೆಯಲ್ಲಿ ಕಳೆದ ಎರಡು ದಶಕಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅದೇ ಸ್ಥಳದಲ್ಲಿ ಗಣೇಶ ಮಂದಿರ ನಿರ್ಮಾಣಕ್ಕೆ ಗ್ರಾಮದ ಅನೇಕರು ನಿರ್ಣಯಿಸಿ ಭಕ್ತರ ದೇಣಿಗೆಯ ನೆರವಿನಿಂದ ಮಂದಿರ ನಿರ್ಮಾಣ ಕಾರ್ಯ ಆರಂಭಿಸಿತ್ತು. ಆದರೆ, ಮುಸ್ಲಿಂ ಸಮುದಾಯದ ಕೆಲವರು ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಕಟ್ಟಡಕ್ಕೆ ಸಂಬಂಧಪಟ್ಟಂತೆ ಕಟ್ಟಡ ಕಟ್ಟದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

ಅಂಕಲಗಾ ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಎರಡೂ ಕಡೆಯವರು ದೂರು ನೀಡಿದ್ದು ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ.
ಅಡ್ಡೂರು ಶ್ರೀನಿವಾಸಲು, ಕಲಬುರಗಿ ಎಸ್ಪಿ

ಮುಸ್ಲಿಂ ಸಮುದಾಯದವರು ಪ್ರಾರ್ಥನಾ ಮಂದಿರಕ್ಕೆ ಕಾಂಪೌಂಡ್ ನಿರ್ಮಿಸಿಕೊಳ್ಳುತ್ತಿದ್ದರು. ಅದಕ್ಕೆ ಯಾರೂ ತಕರಾರು ತೆಗೆದಿರಲಿಲ್ಲ. ಆದರೂ ಗಣೇಶ ಮಂದಿರ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಬೂದಿ ಮುಚ್ಚಿದ ಕೆಂಡದಂತೆ ಇದ್ದ ವಿಷಯಕ್ಕೆ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಪ್ರಸ್ತಾಪಿಸಿ ವಿಡಿಯೊ ಹರಿಬಿಟ್ಟಿದ್ದ. ಹೀಗಾಗಿ ಎರಡೂ ಸಮುದಾಯದ ನಡುವೆ ಸೋಮವಾರ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. 

ಇತ್ತೀಚೆಗೆ ಚಾವಡಿ ಕಟ್ಟೆಯ ಸರ್ವೆ ನಡೆದು, ಆ ಆಸ್ತಿ ಪಂಚಾಯಿತಿಗೆ ಸೇರಿದ್ದು ಎಂಬುದು ಸಾಬೀತಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT