ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ಗಿರಿಯಲ್ಲಿನ ವಿವಾದಾತ್ಮಕ ಗುರು ದತ್ತಾತ್ರೇಯ ಬಾಬಾ ಬುಡನ್ಗಿರಿ ಸ್ವಾಮಿ ದರ್ಗಾದಲ್ಲಿ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ತ್ವರಿತ ನಿರ್ಧಾರ ಕೈಗೊಳ್ಳದಿರುವ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.
‘ಈ ಕುರಿತು ಮೂರು ಬಾರಿ ನ್ಯಾಯಪೀಠ ನಿರ್ದೇಶನ ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ’ ಎಂದು ದೂರಿ ಬಾಬಾ ಬುಡನ್ಗಿರಿ ದರ್ಗಾದ ‘ಸಜ್ಜಾದ ನಶೀನ್’ ಆಗಿರುವ (ಸೂಫಿ ಸಂತರ ಉತ್ತರಾಧಿಕಾರಿ) ಸಯ್ಯದ್ ಗೌಸ್ ಮೊಹಿಯುದ್ದೀನ್ ಷಾ ಖಾದ್ರಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಂಜನ್ ಗೋಗೊಯ್ ಹಾಗೂ ಆರ್.ಭಾನುಮತಿ ಅವರಿದ್ದ ಪೀಠ ನೋಟಿಸ್ ಜಾರಿ ಮಾಡಿತು.
ಮುಂದಿನ ತಿಂಗಳು ಬಾಬಾ ಬುಡನ್ಗಿರಿ ಸ್ವಾಮಿ ದರ್ಗಾದಲ್ಲಿ ಅರ್ಜಿದಾರರಿಗೆ (ಸಜ್ಜಾದ ನಶೀನ್) ಉರುಸ್ ಆಚರಣೆಗೆ ಅವಕಾಶ ನೀಡಬೇಕು ಎಂದು ಕೋರಲಾದ ಮನವಿಯ ಕುರಿತು ಯಾವುದೇ ರೀತಿಯ ಆದೇಶ ನೀಡಲು ನಿರಾಕರಿಸಿದ ನ್ಯಾಯಪೀಠವು, ಏಪ್ರಿಲ್ 6ಕ್ಕೆ ವಿಚಾರಣೆ ಮುಂದೂಡಿತು.
2015ರ ಸೆಪ್ಟೆಂಬರ್ 3, 2017ರ ಮಾರ್ಚ್ 27 ಹಾಗೂ ಸೆಪ್ಟೆಂಬರ್ 22ರಂದು ಸಮಸ್ಯೆ ನೀಗಿಸುವಂತೆ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ ಮುಖ್ಯ ಕಾರ್ಯದರ್ಶಿ, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಯವರು ಸಮಸ್ಯೆ ಕೊನೆಗಾಣಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಲಾಗಿತ್ತು.