ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ ದರ ಏರಿಕೆ ಕುರಿತು ಕೇಂದ್ರ ಸಚಿವರ ನೇತೃತ್ವದಲ್ಲಿ ಸಭೆ: ಬಿ.ಸಿ.ಪಾಟೀಲ

Last Updated 11 ಏಪ್ರಿಲ್ 2021, 11:01 IST
ಅಕ್ಷರ ಗಾತ್ರ

ಕಲಬುರ್ಗಿ: ‘ರಸಗೊಬ್ಬರ ದರ ಹೆಚ್ಚಿದ ಕಾರಣ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರ ನೇತೃತ್ವದಲ್ಲಿ ಸೋಮವಾರ (ಏ.12) ಸಭೆ ನಡೆಯಲಿದ್ದು, ಅದರಲ್ಲಿ ಪರಿಹಾರ ದೊರಕುವ ವಿಶ್ವಾಸವಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

‘ರಸಗೊಬ್ಬರ ಉತ್ಪಾದನೆಗೆ ಬೇಕಾಗುವ ಫಾಸ್ಪರಿಕ್ ಆ್ಯಸಿಡ್ ದರ ಪ್ರತಿ ಬ್ಯಾರೆಲ್‍ಗೆ ₹ 400 ದಿಂದ ₹ 700 ಡಾಲರ್‌ಗೆ ಹೆಚ್ಚಳವಾಗಿದೆ. ಅಲ್ಲದೇ, ಪಾಶ್ಚಿಮಾತ್ಯ ದೇಶಗಳಿಂದ ಅಮದಾಗುವ ಕಚ್ಚಾ ವಸ್ತುಗಳ ದರ ದಿಢೀರ್‌ ಹೆಚ್ಚಳಗೊಂಡ ಕಾರಣ ದೇಶದಲ್ಲಿ ರಸಗೊಬ್ಬರ ದರ ಹೆಚ್ಚಳವಾಗಿದೆ’ ಎಂದು ಅವರು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 7.55 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಪ್ರಮುಖ ಬೆಳೆಗಳಾದ ತೊಗರಿ, ಹತ್ತಿ, ಹೆಸರು, ಉದ್ದು ಸೇರಿದಂತೆ ಇತರೆ ಬೆಳೆಗಳ ಬಿತ್ತನೆಯ ಗುರಿ ಹೊಂದಿದೆ. ಇದಕ್ಕಾಗಿ 46,559 ಕ್ವಿಂಟಲ್ ಬೀಜದ ಬೇಡಿಕೆಯಿದ್ದು, ದಾಸ್ತಾನು ಪ್ರಕ್ರಿಯೆ ನಡೆಯುತ್ತಿದೆ. ಇದರ ಜೊತೆಗೆ 1.19 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿದ್ದು, ಇದರ ದಾಸ್ತಾನಿಗೂ ಕ್ರಮ ವಹಿಸಲಾಗಿದೆ’ ಎಂದು ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 2.81 ಲಕ್ಷ ರೈತರು ನೋಂದಣಿಯಾಗಿದ್ದು, 2019-20ನೇ ಸಾಲಿನಿಂದ ಇಲ್ಲಿಯವರೆಗೆ 2.62 ಲಕ್ಷ ರೈತರಿಗೆ ₹ 457.89 ಕೋಟಿ ಆರ್ಥಿಕ ನೆರವು ನೀಡಲಾಗಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ 38,653 ರೈತೆರು ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳೀಯ ವಿಪತ್ತಿನಡಿ 13,909 ರೈತರು ವಿಮಾ ಪರಿಹಾರಕ್ಕೆ ಕೋರಿದ್ದು, ಇಲ್ಲಿಯವರೆಗೆ 6,248 ರೈತರಿಗೆ ₹ 6.89 ಕೋಟಿ ಪರಿಹಾರ ನೀಡಲಾಗಿದೆ. ಉಳಿದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಸಹ ಜಾರಿಯಲ್ಲಿದೆ’ ಎಂದರು.

‘ನೀರಿನ ಸದ್ಬಳಕೆಗೆ ಪ್ರೋತ್ಸಾಹಿಸುವ ನಿಟ್ಟಿನಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಯೋಜಕತ್ವದಲ್ಲಿ ಶೇ. 90ರಷ್ಟು ರಿಯಾಯಿತಿಯೊಂದಿಗೆ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆ ಅನುಷ್ಠಾನಕ್ಕಾಗಿ 2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ₹ 21.87 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಮಾರ್ಚ್ ಅಂತ್ಯದ ವರೆಗೆ ₹ 21.9 ಕೋಟಿ ವೆಚ್ಚ ಮಾಡಿ 10,175 ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಅಳವಡಿಸಿದೆ’ ಎಂದರು.

ಬಿಸಿಯೂಟದಲ್ಲಿ ಸಿರಿಧಾನ್ಯ ಸೇರ್ಪಡೆ

‘ಶಾಲಾ ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿ ಊಟದಲ್ಲಿ ಸಿರಿಧಾನ್ಯಗಳಾದ ನವಣೆ, ರಾಗಿ, ತೊಗರಿ ನೀಡಲು ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ ನಡೆದಿದ್ದು, ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಚಿವ ಬಿ.ಸಿ.ಪಾಟೀಲ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT