ಕಲಬುರ್ಗಿ: ನಗರದಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಶಾಸಕ ಪ್ರಿಯಾಂಕ್ ಖರ್ಗೆ ಅವರುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿಯೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿದ ಜಿಲ್ಲೆಗಳಲ್ಲಿ ಕಲಬುರ್ಗಿ ಸ್ಥಾನ ಪಡೆದಿದ್ದು ಕೋವಿಡ್ನಿಂದ ಮೊದಲ ಸಾವು ಸಂಭವಿಸಿರುವುದು ಕೂಡಾ ಇಲ್ಲಿಯೇ ಎನ್ನುವುದು ಗಮನಾರ್ಹ. ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡುವ ದೃಷ್ಟಿಯಿಂದ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಕೊವೀಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು ಇಲ್ಲಿಯವರೆಗೆ 140 ಸೋಂಕಿತರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸೆ ದೊರಕದಿರುವುದರಿಂದ ಹಲವಾರು ಸೋಂಕಿತರು ಸೊಲ್ಲಾಪುರ ಹಾಗೂ ಹೈದರಾಬಾದ್ಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಸೋಂಕು ಪತ್ತೆ ಕೇಂದ್ರ ತೆರೆಯಲಾಗಿದ್ದು ಹೆಚ್ಚುತ್ತಿರುವ ಸೋಂಕು ಪತ್ತೆಗೆ ಇಎಸ್ಐಸಿ ಆಸ್ಪತ್ರೆಯಲ್ಲಿ ಮತ್ತೊಂದು ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಆಗ್ರಹಿಸುತ್ತಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದುದೂರಿದ್ದಾರೆ.