ಕಲಬುರ್ಗಿ: ‘ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿರುವ ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಿದ್ದು ಸ್ವಾಗತಾರ್ಹ. ಆದರೆ, ಈ ನಿಗಮಕ್ಕೆ ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡಬೇಕು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ದೇವಿಂದ್ರಪ್ಪ ಸುತಾರ ಆಗ್ರಹಿಸಿದರು.
‘ವಿಶ್ವಕರ್ಮ ಸಮುದಾಯ ರಾಜ್ಯದಲ್ಲಿ 45 ಲಕ್ಷ ಜನಸಂಖ್ಯೆ ಹೊಂದಿದೆ. ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡನೀಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಲು ನಮ್ಮ ಸಮಾಜವೂ ಬೆಂಬಲಿಸಿದೆ. ಆದರೆ, ಮುಖ್ಯಮಂತ್ರಿಗಳು ಈಗ ನಮ್ಮನ್ನೇ ಮರೆತಿದ್ದಾರೆ’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಈಗಾಗಲೇ ಅಭಿವೃದ್ಧಿ ನಿಗಮಕ್ಕೆ ₹ 50 ಕೋಟಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ₹ 25 ಕೋಟಿ ಮಾತ್ರ ನೀಡಿದೆ. ಇನ್ನು ನಿಗಮಕ್ಕೆ ಸೂಕ್ತ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿಲ್ಲ. ಕೂಡಲೇ ಅಧ್ಯಕ್ಷರನ್ನು ನೇಮಕ ಮಾಡಬೇಕು ಹಾಗೂ ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.