ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ ಮಳಿಗೆ ಉದ್ಘಾಟನೆ

Last Updated 14 ಏಪ್ರಿಲ್ 2019, 9:22 IST
ಅಕ್ಷರ ಗಾತ್ರ

ಕಲಬುರ್ಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಪ್ರತಿಯುಬ್ಬರೂ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸ್ಥಾಪಿಸಲಾದ ‘ಮತದಾರ ಜಾಗೃತಿ ಅಭಿಯಾನ’ ಮಳಿಗೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಆರ್.ವೆಂಕಟೇಶಕುಮಾರ್ ಭಾನುವಾರ ಉದ್ಘಾಟಿಸಿದರು.

ಮಳಿಗೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆಯಲ್ಲಿ ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು ಎಂಬುದು ಚುನಾವಣಾ ಆಯೋಗದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮತದಾರರಿಗೆ ಶಿಕ್ಷಣ, ಜಾಗೃತಿ ಮೂಡಿಸಲು ಹತ್ತಾರು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅದಕ್ಕೆ ಹೊಸದಾಗಿ ಈ ಜಾಗೃತಿ ಅಭಿಯಾನ ಸೇರ್ಪಡೆಯಾಗಿದೆ’ ಎಂದರು.

ಮೂರು ದಿನ ಪ್ರದರ್ಶನ: ‘ಏ.14 ರಿಂದ 16ರ ವರೆಗೆ ಮೂರು ದಿನ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೆ ಜಾಗೃತಿ ಅಭಿಯಾನದ ಪ್ರದರ್ಶನವು ಸಾರ್ವಜನಿಕರು ಮತ್ತು ಪ್ರಯಾಣಿಕರ ವೀಕ್ಷಣೆಗೆ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಬೇಕು. ಏ.23 ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ತಿಳಿಸಿದರು.

ಗಮನ ಸೆಳೆದ ರೇಖಾಚಿತ್ರಗಳು: ಮಳಿಗೆಯಲ್ಲಿರುವ ರೇಖಾಚಿತ್ರಗಳು ನೋಡುಗರ ಗಮನ ಸೆಳೆದವು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರ ‘ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ ಮತದಾನ ದೇಶವನ್ನು ರೂಪಿಸುತ್ತದೆ’, ‘ತಪ್ಪದೆ ಮತದಾನ ಮಾಡಿ’, ಚಿತ್ರನಟಿ ಪ್ರಣೀತಾ ಅವರ ‘ಮತದಾನ ಮಾಡಿದರೆ ಹೆಣ್ಣು; ತೆರೆಯುವುದು ದೇಶದ ಕಣ್ಣು’ ಎಂಬ ಸಂದೇಶಗಳು ಸಾರ್ವಜನಿಕರ ಗಮನ ಸೆಳೆದವು.

ಅಕ್ರಮಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ ಅಭಿವೃದ್ಧಿ ಪಡಿಸಿರುವ ‘ಸಿ ವಿಜಿಲ್’ ಹಾಗೂ ‘ಚುನಾವಣಾ’ ಆ್ಯಪ್‌ಗಳ ಬಗ್ಗೆಯೂ ಇಲ್ಲಿ ಪ್ರಸ್ತುತಪಡಿಸಲಾಗಿದೆ.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ರಾಜಾ ಪಿ., ಪಾಲಿಕೆ ಆಯುಕ್ತೆ ಫೌಜಿಯಾ ಬಿ.ತರನ್ನುಮ, ಕಲಬುರ್ಗಿ ಉಪ ವಿಭಾಗಾಧಿಕಾರಿ ರಾಹುಲ ತುಕಾರಾಮ ಪಾಂಡ್ವೆ, ಪ್ರೊಬೇಷನರಿ ಸ್ನೇಹಲ್ ಸುಧಾಕರ ಲೋಖಂಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT