ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲೆಯ ಎಲ್ಲ ಪಕ್ಷಗಳ ರಾಜಕೀಯ ನಾಯಕರು ತಮ್ಮ ಕುಟುಂಬ ಸಹಿತ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ತೆರಳಿ ಮಂಗಳವಾರ ಮತದಾನ ಮಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ದಂಪತಿ ಬಸವ ನಗರದಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದಂಪತಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಕುಟುಂಬದ ಸದಸ್ಯರು ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿಯ ಮತಗಟ್ಟೆ ಸಂಖ್ಯೆ 26ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರು ಬೆಳಿಗ್ಗೆ ಶರಣ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಗರದ ಎನ್ಜಿಒ ಕಾಲೊನಿಯಲ್ಲಿರುವ ಮತಗಟ್ಟೆ ಸಂಖ್ಯೆ 93ರಲ್ಲಿ ಮತ ಚಲಾಯಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ದಂಪತಿ ಸೇಡಂ ತಾಲ್ಲೂಕಿನ ಉಡುಗಿ ಗ್ರಾಮದ ಮತಗಟ್ಟೆ ಸಂಖ್ಯೆ 136 ರಲ್ಲಿ ಮತದಾನ ಮಾಡಿದರೆ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ಅವರು ಪಟ್ಟಣದ 112ರ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದ ಬೂತ್ ಸಂಖ್ಯೆ 31ರಲ್ಲಿ ಮತದಾನ ಮಾಡಿದರು. ಜೆಡಿಎಸ್ ಮುಖಂಡ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ನರಿಬೋಳ ಗ್ರಾಮದ ಮತಗಟ್ಟೆ ಸಂಖ್ಯೆ 111ರಲ್ಲಿ ಮತದಾನ ಮಾಡಿದರು.
ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಹಾಗೂ ಕುಟುಂಬ ಸದಸ್ಯರು ಕಾಳಗಿ ತಾಲ್ಲೂಕಿನ ಮತ್ತಿಮಡು ಗ್ರಾಮದಲ್ಲಿ ಮತದಾನ ಮಾಡಿದರು. ಮಾಜಿ ಸಚಿವ ಬಾಬುರಾವ ಚವ್ಹಾಣ ದಂಪತಿ ನಗರದ ಐಟಿಐ ಕಾಲೇಜಿನ ಮತಗಟ್ಟೆ ಸಂಖ್ಯೆ 180ರಲ್ಲಿ ಮತದಾನ ಮಾಡಿದರು.
ಕಲಬುರಗಿ ದಕ್ಷಿಣ ಕ್ಷೇತ್ರ ಶಾಸಕ ಅಲ್ಲಪ್ರಭು ಪಾಟೀಲ ಅವರು ನಗರದ ಮತಗಟ್ಟೆಯೊಂದರಲ್ಲಿ ಮತದಾನ ಮಾಡಿದರು. ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ನಗರದ ಎಂ.ಪಿ.ಎಚ್.ಎಸ್ ಶಾಲೆಯಲ್ಲಿರುವ ಮತಗಟ್ಟೆ 51ರಲ್ಲಿ ಕುಟುಂಬ ಸಮೇತ ಮತದಾನ ಮಾಡಿದರು.
ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತೀಮಾ ಅವರು ನಗರದ ಮತಗಟ್ಟಯೊಂದರಲ್ಲಿ ಮತದಾನ ಮಾಡಿದರೆ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ ಹಾಗೂ ಕುಟುಂಬದ ಸದಸ್ಯರು ಕಲಬುರಗಿಯ ನೆಹರು ಗಂಜನಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಲಬುರಗಿಯ ಎನ್.ವಿ. ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಹಕ್ಕು ಚಲಾಯಿಸಿದರು.
ಅಫಜಲಪುರ ತಾಲ್ಲೂಕಿನ ದೇಸಾಯಿ ಕಲ್ಲೂರು ಗ್ರಾಮದಲ್ಲಿ ಶಾಸಕ ಎಂ.ವೈ. ಪಾಟೀಲ ಮತದಾನ ಮಾಡಿದರೆ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹಾಗೂ ಕುಟುಂಬದ ಸದಸ್ಯರು ಸ್ಟೇಶನ್ ಗಾಣಗಾಪುರ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಅದೇ ಮತಗಟ್ಟೆಯಲ್ಲಿ ಬಿಜೆಪಿ ಮುಖಂಡ ನಿತಿನ್ ಗುತ್ತೇದಾರ್ ಮತದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.