ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತು ಗುರುವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿಯು ಕಚೇರಿ ಮೂರು ಬಾರಿ ಗಾಂಧಿ ಪುರಸ್ಕಾರ ಪಡೆದರೂ ಹಲವು ತಿಂಗಳಿಂದ ಗ್ರಾಮದಲ್ಲಿ ದಿನನಿತ್ಯ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಸಮಾಜ ಸೇವಕ ಜೆ.ಎಂ ಕೊರಬು ಮಾತನಾಡಿ, ‘ಗ್ರಾಮೀಣ ಪ್ರದೇಶದ ಬಡ ಜನರಿಗೆ ಶುದ್ಧ ಕುಡಿಯುವ ನೀರಿಗಾಗಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಆದರೆ ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದಿಗೂ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಇದೆ’ ಎಂದರು.
ಕುಡಿಯುವ ನೀರಿನ ಸಮಸ್ಯೆಯನ್ನುಶೀಘ್ರ ಬಗೆಹರಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಸಿದರು.