ಅಫಜಲಪುರ: ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಲು ಕಾಂಗ್ರೇಸ್ ಯುವ ಸಮಿತಿಯ ಸರ್ವ ಸದಸ್ಯರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ನಗರ ಘಟಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜೀದ ಲತೀಫ್ ಪಟೇಲ್ ಹಾಗೂ ಸದಸ್ಯರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷವು ಈ ದೇಶದ ಒಳಿತಿಗಾಗಿ ಸಾಕಷ್ಟು ಜನಪರ ಯೋಜನೆಗಳನ್ನು ತರುವ ಮೂಲಕ ಶ್ರಮಿಸಿದೆ. ಆದರೆ ಬಿಜೆಪಿ ಪಕ್ಷವು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ ಜನಪರ ಯೋಜನೆಗಳನ್ನು ರದ್ದುಗೊಳಿಸಿ ಎಲ್ಲವೂ ಖಾಸಗೀಕರಣ ಮಾಡುತ್ತಿದ್ದಾರೆ. ಈ ದೇಶ ಉಳಿಯಬೇಕಾದರೆ ದೇಶಕ್ಕೆ ಹಾಗೂ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಬಹಳ ಅವಶ್ಯಕತೆಯಿದೆ. ಇದಕ್ಕಾಗಿ ಯುವಕರು ಶ್ರಮಿಸಬೇಕು ಎಂದು ತಿಳಿಸಿದರು.
ಯುವ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಮಾಜೀದ ಲತೀಫ್ ಪಟೇಲ್ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಮತ್ತೊಮ್ಮೆ ಜಯಭೇರಿ ಬಾರಿಸಲು ಬೂತ್ ಮಟ್ಟದಿಂದ ಪಕ್ಷವು ಸಂಘಟನೆ ಮಾಡಲಾಗುವುದು. ಶಾಸಕ ಎಂ.ವೈ.ಪಾಟೀಲ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು.