ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲಕ್ಕುರುಳಿದ ವಿದ್ಯುತ್ ಕಂಬ ದುರಸ್ತಿಗೆ ಸೂಚನೆ

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ನೇತೃತ್ವದಲ್ಲಿ ಕೆಡಿಪಿ ಸಭೆ
Last Updated 26 ನವೆಂಬರ್ 2020, 5:27 IST
ಅಕ್ಷರ ಗಾತ್ರ

ಕಲಬುರ್ಗಿ: ಅತಿವೃಷ್ಟಿಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದರಿಂದ ಬಹುತೇಕ ಗ್ರಾಮಗಳು ಹಾಗೂ ಜಮೀನುಗಳ ನೀರಾವರಿಗೆ ವಿದ್ಯುತ್ ಸಂಪರ್ಕವಿಲ್ಲ. ಆದ್ದರಿಂದ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ರೈತರಿಗೆ ನಿರಂತರ ಏಳು ಗಂಟೆ ತ್ರಿಫೇಸ್ ವಿದ್ಯುತ್ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಜೆಸ್ಕಾಂ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ನಗರದ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿತ್ಯ ಹಲವು ಗ್ರಾಮಸ್ಥರು ಹಾಗೂ ರೈತರು ದೂರವಾಣಿ ಕರೆ ಮಾಡುತ್ತಿದ್ದು, ಜೆಸ್ಕಾಂ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂದರು. ಇದಕ್ಕೆ ದನಿಗೂಡಿಸಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿರಸಗಿ, ಅಫಜಲಪುರ ತಾಲ್ಲೂಕಿನಲ್ಲಿ ಪ್ರವಾಹದ ನೀರಿನಿಂದಾಗಿ ಸಾಕಷ್ಟು ಕಂಬಗಳು, ಟಿ.ಸಿ.ಗಳಿಗೆ ಹಾನಿಯಾಗಿದ್ದು, ಅವುಗಳನ್ನು ಆದ್ಯತೆಯ ಮೇಲೆ ದುರಸ್ತಿ ಮಾಡಭೇಕು ಎಂದು ಸೂಚನೆ ನೀಡಿದರು.

ಚಿಂಚೋಳಿ ತಾಲ್ಲೂಕಿನಲ್ಲಿ ವರ್ಷದ ಎಲ್ಲ ತಿಂಗಳೂ ಕೃಷಿ ಚಟುವಟಿಕೆ ನಡೆಯುತ್ತಿದ್ದು, ಟಿ.ಸಿ.ಗಳು ಆಗಾಗ್ಗೆ ಸುಡುವುದರಿಂದ ನೀರಾವರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಜೆಸ್ಕಾಂ ಎಂಜಿನಿಯರ್‌ಗಳು, ‘ಸಂಸ್ಥೆ ಬಳಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ವಿದ್ಯುತ್ ಪೂರೈಸಲಾಗುತ್ತಿದೆ. ಸುಟ್ಟ ಟಿ.ಸಿ.ಗಳನ್ನು ತಕ್ಷಣ ಬದಲಾಯಿಸಲು ಅನುವಾಗುವಂತೆ ಪ್ರತಿ ಉಪವಿಭಾಗದಲ್ಲಿ 10 ಟಿ.ಸಿ.ಗಳ ಹೆಚ್ಚುವರಿ ಸಂಗ್ರಹವನ್ನು ಇರಿಸಲಾಗಿರುತ್ತದೆ’ ಎಂದರು.

ಅತಿವೃಷ್ಟಿಯಿಂದಾಗಿ ಜಿಲ್ಲೆಯಾದ್ಯಂತ ಹಲವು ಕೆರೆಗಳು ಒಡೆದು ಹೋಗಿವೆ. ಆದರೆ, ಸಮರ್ಪಕ ನಿರ್ವಹಣೆ ಇದ್ದಿದ್ದರೆ ಇಷ್ಟೊಂದು ಕೆರೆಗಳು ಒಡೆಯುತ್ತಿರಲಿಲ್ಲ ಎಂದು ಗೌತಮ ಪಾಟೀಲ ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್, ‘ಹಲವು ಕೆರೆಗಳು 50, 60 ವರ್ಷಗಳಷ್ಟು ಹಳೆಯದಾಗಿದ್ದು, ನಿರಂತರವಾಗಿ ಸುರಿದ ಮಳೆಯಿಂದಾಗಿ ಕೆರೆಗಳ ಧಾರಣಾಶಕ್ತಿಯನ್ನೂ ಮೀರಿದ್ದರಿಂದ ಕೆರೆಗಳು ಒಡೆದಿವೆ. ಕೆರೆ ದುರಸ್ತಿಗೆ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಕೆರೆ ಒಡೆದಿದ್ದರಿಂದ ರೈತರ ಹೊಲಗಳಿಗೆ ಕೆರೆಯ ಮಣ್ಣು, ಮರಳಿ, ಕಲ್ಲುಗಳು ನುಗ್ಗಿ ಆಳೆತ್ತರದಷ್ಟು ಹೂಳು ತುಂಬಿಕೊಂಡಿದೆ. ಅಲ್ಲಿ ಹೊಲ ಇತ್ತು ಎಂಬುದೇ ಕಾಣದಂತಾಗಿದೆ. ಆ ಮಣ್ಣನ್ನು ತೆರವುಗೊಳಿಸಲು ಏನಾದರೂ ಕ್ರಮ ಇದೆಯೇ ಎಂದು ಗೌತಮ ಪಾಟೀಲ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ., ನರೇಗಾ ಯೋಜನೆಯಡಿ ಹೂಳನ್ನು ತೆಗೆಸಲು ಅವಕಾಶವಿದೆಯಾದರೂ ಇಷ್ಟೊಂದು ಬೃಹತ್ ಪ್ರಮಾಣದ ಹೂಳನ್ನು ತೆಗೆಯಲು ಯೋಜನೆಯಡಿ ಆಗುವುದಿಲ್ಲ. ಕಂದಾಯ ಇಲಾಖೆಯಿಂದ ಹೂಳು ತೆಗೆಯಲು ಏನಾದರೂ ಯೋಜನೆ ರೂಪಿಸುವ ಸಂಬಂಧ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆಯುತ್ತೇನೆ ಎಂದರು.

150 ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ: 150 ಶಿಕ್ಷಕರಿಗೆ ಬಡ್ತಿ ನೀಡಲಾಗಿದ್ದು, ಇದರಿಂದ ಖಾಲಿಯಾಗಿದ್ದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿಕೊಂಡಂತಾಗಿದೆ. ಇನ್ನೂ 64 ಮುಖ್ಯ ಶಿಕ್ಷಕರಿಗೆ ಬಡ್ತಿ ಪ್ರಕ್ರಿಯೆ ನಡೆಯಬೇಕಿದೆ ಎಂದು ಡಿಡಿಪಿಐ ಎಸ್‌.ಪಿ.ಬಾಡಗಂಡಿ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತಗೌಡ ಪಾಟೀಲ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ದಿಲೀಪ ಪಾಟೀಲ, ಉಪ ಕಾರ್ಯದರ್ಶಿ ಕಿಶೋರಕುಮಾರ ದುಬೆ ಮತ್ತು ಅಧಿಕಾರಿಗಳು ಇದ್ದರು.

ಶೀಘ್ರ ಪ್ರಸ್ತಾವ ಸಲ್ಲಿಸಿ: ಸಿಇಓ

ಕೆಲವೇ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಘೋಷಣೆ ಯಾಗಲಿರುವುದರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಆದ್ದರಿಂದ ಹೊಸ ಕಾಮಗಾರಿಗಳಿಗೆ ಅನುಮೋದನೆ ಪಡೆದುಕೊಳ್ಳಲು ಶೀಘ್ರ ಪ್ರಸ್ತಾವ ಸಲ್ಲಿಸ ಬೇಕು ಎಂದು ಜಿ.ಪಂ. ಸಿಇಓ ಡಾ. ರಾಜಾ ಪಿ. ಅಧಿಕಾರಿಗಳಿಗೆ ಸೂಚಿಸಿದರು.

ಆರ್ಥಿಕ ವರ್ಷದ ಕೊನೆಯಲ್ಲಿ ಪ್ರಸ್ತಾವ ಸಲ್ಲಿಸುವುದು ಸರಿಯಲ್ಲ. ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವೇ ಮುಗಿಸಬೇಕು. ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ಮೊಟ್ಟೆ ವಿತರಣೆಯಲ್ಲಿ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು ಎಂದರು.

ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆಗಳು ಬರುವುದರಿಂದ ಚುನಾವಣಾ ಕಾರ್ಯಕ್ಕಾಗಿ ಶಾಲೆಗಳನ್ನು ಬಳಸಿಕೊಳ್ಳಬೇಕಾಗುತ್ತದೆ. ಆದ್ದರಿಂದ ಜಿಲ್ಲೆಯ 120 ಶಾಲೆಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು. ಆ ಶಾಲೆಗಳ ಪಟ್ಟಿ ನೀಡುವಂತೆ ಡಿಡಿಪಿಐ ಎಸ್.ಪಿ.ಬಾಡಗಂಡಿ ಅವರಿಗೆ ಸೂಚನೆ ನೀಡಿದರು.

ಅಧಿಕಾರಿ ತರಾಟೆಗೆ: ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಹೆಚ್ಚಿನ ಪ್ರಗತಿ ತೋರಿಸಲು ವಿಫಲರಾದ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಜೀಜುದ್ದೀನ್ ಅವರನ್ನು ಸಿಇಓ ಅವರು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT