ಕಲಬುರ್ಗಿ: ನಗರದ ಜಿಲ್ಲಾ ಆಸ್ಪತ್ರೆಯ ಸುಟ್ಟ ಗಾಯಾಳುಗಳ ಚಿಕಿತ್ಸಾ ವಾರ್ಡ್ನಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಹೊತ್ತು ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಆಸ್ಪತ್ರೆ ಸಿಬ್ಬಂದಿ ಕೂಡಲೇ ಕಾರ್ಯಾಚರಣೆ ಕೈಗೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ.
ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕ ಸಾಧನಗಳನ್ನು (ಆಕ್ಸಿಜನ್ ಸಿಲಿಂಡರ್) ಬಳಸಿ ಬೆಂಕಿ ನಂದಿಸಿದರು. ಸುಟ್ಟಗಾಯಗಳ ವಾರ್ಡ್ನಲ್ಲಿದ್ದ ಏಳು ಮತ್ತು ಡಯಾಲಿಸಿಸ್ ವಾರ್ಡ್ನಲ್ಲಿದ್ದ ನಾಲ್ವರು ರೋಗಿಗಳನ್ನು ಸ್ಥಳಾಂತರಿಸಿದರು.
‘ವಾರ್ಡ್ನ ಎಲೆಕ್ಟ್ರಿಕ್ ಬೋರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದೆವು. ಹೆಚ್ಚಿನ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಿದೆವು. ಇದರಿಂದ ಹೆಚ್ಚಿನ ಅನಾಹುತ ಆಗಿಲ್ಲ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಎನ್.ಜೋಶಿ ‘ಪ್ರಜಾವಾಣಿ’ಗೆ ತಿಳಿಸಿದರು.
‘ನಾವು ಸ್ಥಳಕ್ಕೆ ಬರುವಷ್ಟರಲ್ಲಿ ಆಸ್ಪತ್ರೆ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಹೊಗೆ ಆವರಿಸಿಕೊಂಡಿತ್ತು. ಆವರಣವನ್ನು ಹೊಗೆ ಮುಕ್ತಗೊಳಿಸಲು ಕ್ರಮ ಕೈಗೊಂಡೆವು’ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪರಶುರಾಮ ತಿಳಿಸಿದರು.