ಕಲಬುರ್ಗಿ: ‘ರಾಜ್ಯ ಸರ್ಕಾರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತ್ಯೇಕ ರಾಜ್ಯ ಹೋರಾಟ ಅನಿವಾರ್ಯ’ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎ.ಎಸ್.ಭದ್ರಶೆಟ್ಟಿ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವ ಸರ್ಕಾರಗಳೂ ನಮ್ಮ ಬೇಡಿಕೆಗಳನ್ನು ಪರಿಗಣಿಸಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ತಿಳಿಸಿದರು.
‘ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿ ಎಂದು ಘೋಷಿಸಬೇಕು. ಸುವರ್ಣ ವಿಧಾನಸೌಧದಲ್ಲಿ ಪೂರ್ಣಾವಧಿ ಅಧಿವೇಶನ ನಡೆಸಬೇಕು. 371 (ಜೆ) ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೃಷ್ಣಾ ಮೇಲ್ದಂಡೆ, ಕಳಸಾ–ಬಂಡೂರಿ, ಮಹಾದಾಯಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು’ ಎಂದರು.
‘ಬಾದಾಮಿಯಲ್ಲಿ ಲಲಿತಕಲಾ ಅಕಾಡೆಮಿ, ಬಾಗಲಕೋಟೆಯಲ್ಲಿ ಕಬ್ಬು ಅಭಿವೃದ್ಧಿ ಮಂಡಳಿ ಕಚೇರಿ ಸ್ಥಾಪಿಸಬೇಕು’’ ಎಂದು ಆಗ್ರಹಿಸಿದರು. ಪ್ರೊ.ಶಿವರಾಜ ಪಾಟೀಲ ಇದ್ದರು.