ಮಹಾರಾಷ್ಟ್ರದ ಜತ್ತ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ನೀರು ಬಿಡುವ ಕುರಿತು ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ, ‘ಬೇಸಿಗೆಯಲ್ಲಿ ರಾಜ್ಯದ ಕೃಷ್ಣಾ ಹಾಗೂ ಭೀಮಾ ನದಿಗೆ ಮಹಾರಾಷ್ಟ್ರ 4 ಟಿಎಂಸಿ ಅಡಿ ನೀರನ್ನು ಹರಿಸಿದರೆ ಪ್ರತಿಯಾಗಿ ವಿಜಯಪುರ ಜಿಲ್ಲೆ ಬಬಲೇಶ್ವರದ ತುಬಚಿ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರಕ್ಕೆ ನೀರು ಬಿಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದ್ದೇನೆ. ಈ ಬಗ್ಗೆ ಅಪಾರ್ಥ ಮಾಡಿಕೊಳ್ಳುವುದು ಬೇಡ. ಮಹಾರಾಷ್ಟ್ರದವರು ನಮಗೆ ದಾಯಾದಿಗಳೇನೂ ಅಲ್ಲ. ಆ ರಾಜ್ಯದ ಮುಖ್ಯಮಂತ್ರಿ ಮಹಾರಾಷ್ಟ್ರದಿಂದ ನೀರು ಕೊಟ್ಟರೆ, ಪ್ರತಿಯಾಗಿ ಕರ್ನಾಟಕದಿಂದಲೂ ಉಜನಿ ಜಲಾಶಯಕ್ಕೆ ನೀರು ಕೊಡುವಂತೆ ಕೇಳಿದ್ದರು. ಇದು ಇನ್ನೂ ಚರ್ಚೆಯ ಹಂತದಲ್ಲಿದೆಯೇ ಹೊರತು ನಿರ್ಧಾರವಾಗಿಲ್ಲ’ ಎಂದರು.