ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಉಪಚುನಾವಣೆ ನಡೆಯುವ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 44 ಅತಿಸೂಕ್ಷ್ಮ ಹಾಗೂ 284 ಸೂಕ್ಷ್ಮ ಮತಗಟ್ಟೆಗಳನ್ನು ಚುನಾವಣಾಧಿಕಾರಿಗಳು ಗುರುತಿಸಿದ್ದಾರೆ.
ಶಿವಾಜಿನಗರ ಕ್ಷೇತ್ರದಲ್ಲಿ ಅತಿ ಹೆಚ್ಚು (24) ಅತಿಸೂಕ್ಷ್ಮ ಮತಗಟ್ಟೆಗಳಿವೆ. ಆದರೆ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ದಲ್ಲಿ ಅತಿಸೂಕ್ಷ್ಮ ಮತಗಟ್ಟೆಗಳೇ ಇಲ್ಲ. ಯಶವಂತಪುರ ಕ್ಷೇತ್ರದಲ್ಲಿ 15 ಹಾಗೂ ಕೆ.ಆರ್.ಪುರ ಕ್ಷೇತ್ರದಲ್ಲಿ 5 ಅತಿಸೂಕ್ಷ್ಮ ಮತಗಟ್ಟೆಗಳಿವೆ.
ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಬಿ.ಎಚ್.ಅನಿಲ್ ಕುಮಾರ್ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೊಸತಾಗಿ ಸೇರ್ಪಡೆಯಾದ ಹಾಗೂ ಮತಗಟ್ಟೆ ಬದಲಾವಣೆ ಮಾಡಿರುವ ಮತದಾರರಿಗೆ ಗುರುತಿನ ಚೀಟಿ ವಿತರಣೆ ಇದೇ 28 ರಿಂದ ಆರಂಭವಾಗಲಿದೆ. ನಾಲ್ಕೂ ಕ್ಷೇತ್ರಗಳ ಎಲ್ಲ ಮತದಾರರಿಗೆ ಗುರುತಿನ ಚೀಟಿ ಹಾಗೂ ಮತದಾರರ ಸ್ಲಿಪ್ ಅನ್ನು ಡಿ.1ರ ಒಳಗೆ ವಿತರಿಸಲಾಗುತ್ತದೆ’ ಎಂದರು.
‘ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಸಹಾಯವಾಣಿಗೆ (1950) ಇದುವರೆಗೆ 2,636 ದೂರುಗಳು ಬಂದಿವೆ. ಈ ಪೈಕಿ 2,634 ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಅಕ್ರಮ ಕಂಡು ಬಂದರೂ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು’ ಎಂದರು.
37 ಮಂದಿ ಬಂಧನ: ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮೂರು ಕಡೆ ದಾಳಿ ನಡೆಸಿದ್ದಾರೆ.
ಒಟ್ಟು 37 ಮಂದಿಯನ್ನು ಬಂಧಿಸಿದ್ದು, ಅವರಿಂದ 14,506 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ₹ 87.41 ಲಕ್ಷ ಎಂದು ಅಂದಾಜಿಸಲಾಗಿದೆ.
ಮಹಾಲಕ್ಷ್ಮಿ ಬಡಾವಣೆಯಲ್ಲಿ ಮೂರು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ₹ 1.85 ಲಕ್ಷ ನಗದು ಜಪ್ತಿ ಮಾಡಿದ್ದಾರೆ.