ಮಡಿಕೇರಿ: ಟಿಪ್ಪು ಜಯಂತಿಗೆ ಒಂದು ದಿನವಷ್ಟೇ ಬಾಕಿ ಇದೆ. ಜಿಲ್ಲೆಯ ವಿವಿಧೆಡೆ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತವಾಗಿದೆ.ಶುಕ್ರವಾರ ಬೆಳಿಗ್ಗೆಯೇ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡಿರುವ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
‘ಸೂತಕದ ಮನೆಯಲ್ಲಿ ಸಂಭ್ರಮ ಏಕೆ’ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಕುಶಾಲನಗರ ಹಾಗೂ ಸುಂಟಿಕೊಪ್ಪದಲ್ಲಿ ಪೊಲೀಸರು ಪಥ ಸಂಚಲನ ನಡೆಸುತ್ತಿದ್ದಾರೆ.
ಇಂದು ಸಂಜೆಯಿಂದ ನಿಷೇಧಾಜ್ಞೆ: ಕೊಡಗು ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅರೆಸ್ಟ್ ಮಿ ಆಂದೋಲನ:ಸರ್ಕಾರದ ವಿರುದ್ಧಬಿಜೆಪಿ ಕಾರ್ಯಕರ್ತರು ‘ಅರೆಸ್ಟ್ ಮಿ’ ಆಂದೋಲನ ಆರಂಭಿಸಿದ್ದಾರೆ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಪ್ರತಿಭಟನಾಕಾರರು ಸವಾಲು ಹಾಕಿದರು.
ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಹ್ಮಣಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ.ಬಿ. ಭಾರತೀಶ್, ಪ್ರಧಾನ ಕಾರ್ಯದರ್ಶಿ ಮನು ಮುತ್ತಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.