ಕುಶಾಲನಗರ: ಜೀವನದಿ ಕಾವೇರಿ ಮೂಲ ಸ್ಥಾನದಲ್ಲಿಯೇ ಬತ್ತಿ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಕಾವೇರಿ ಆರತಿ ಕ್ಷೇತ್ರದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ 158ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಬಾರಿ ಕಾವೇರಿಯ ಮೂಲ ಸ್ಥಾನದಲ್ಲಿಯೇ ಕಾವೇರಿ ಸಂಪೂರ್ಣ ಬತ್ತಿ ಹೋಗಿದ್ದು, ಕಳೆದ ಒಂದು ತಿಂಗಳಿನಿಂದ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿದೆ. ಜಲಚರಗಳು ಸಂಪೂರ್ಣ ನಾಶಗೊಂಡಿವೆ. ಜೊತೆಗೆ ನದಿ ತಟದ ಗ್ರಾಮ ಪಟ್ಟಣಗಳ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ತಲೆದೋರಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಈ ಬಗ್ಗೆ ವಾಸ್ತವ ಸ್ಥಿತಿ ಅಧ್ಯಯನ ಮಾಡುವುದರೊಂದಿಗೆ ಕಾವೇರಿಯ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದರು.
ಆರತಿ ಕಾರ್ಯಕ್ರಮ ಅಂಗವಾಗಿ ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ, ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು. ಕಾರ್ಯಕ್ರಮದಲ್ಲಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಡಿ ಆರ್ ಸೋಮಶೇಖರ್, ಬಳಪಂಡ ಪೊನ್ನು, ಚೈತನ್ಯ ಮತ್ತಿತರರು ಇದ್ದರು.