ಮಡಿಕೇರಿ: ವಿರೋಧ ಪಕ್ಷಗಳಿಂದ ಬಿಜೆಪಿಯ ಜನಸ್ವರಾಜ್ ಸಮಾವೇಶಕ್ಕೆ ಟೀಕೆ ವ್ಯಕ್ತವಾದ ಬೆನ್ನಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೊಡಗು ಪ್ರವಾಸ ದಿಢೀರ್ ರದ್ದುಗೊಂಡಿದೆ.
ಅನಿವಾರ್ಯ ಕಾರಣಗಳಿಂದ ಸೋಮವಾರದ ಕೊಡಗು ಪ್ರವಾಸ ರದ್ದು ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಜನಸ್ವರಾಜ್ ಸಮಾವೇಶದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಬೇಕಿತ್ತು. ಅಕಾಲಿಕ ಮಳೆಯಿಂದ ರಾಜ್ಯದ ಸಾಕಷ್ಟು ಜಿಲ್ಲೆಗಳಲ್ಲಿ ಅಪಾರ ನಷ್ಟವಾಗಿದ್ದ ಸಂದರ್ಭದಲ್ಲಿ ಸಮಾವೇಶ ನಡೆಯುತ್ತಿರುವುದನ್ನು ವಿರೋಧ ಪಕ್ಷದ ಮುಖಂಡರು ಪ್ರಶ್ನಿಸಿದ್ದರು.
ಬೆಳಿಗ್ಗೆ 11ಕ್ಕೆ ಸಮಾವೇಶ ನಡೆಯುತ್ತಿದ್ದು, ಉಳಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಸಂಸದ ಪ್ರತಾಪ ಸಿಂಹ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಪರ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.