ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪೊಲೀಸರ ವಿರುದ್ಧ ಘೋಷಣೆ ಕೂಗಿದ ಅವರು ವಿಜಯ ವಿನಾಯಕ ದೇಗುಲದಿಂದ ಮೆರವಣಿಗೆ ಹೊರಟರು.
ಪೊಲೀಸರು ಬಿಜೆಪಿ ಕೈಗೊಂಬೆಗಳಾಗಿದ್ದಾರೆ ಎಂದು ಆರೋಪಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬದಲಾವಣೆ ಆಗಬೇಕು ಎಂದು ಆಗ್ರಹಿಸಿದರು. ಆಗಸ್ಟ್26 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅಂದು ಬಂದು ಬಿಜೆಪಿ ಕಾರ್ಯಕರ್ತರು ಮುಖಂಡರು ನೋಡಲಿ ಎಂದೂ ಸವಾಲೆಸೆದರು.
ಬಿಜೆಪಿ ಶಾಸಕರು ಮೊಟ್ಟೆ ಎಸೆದವರಿಗೆ ಬೆಂಬಲ ನೀಡುತ್ತಿದ್ದಾರೆ. ಭಾವನಾತ್ಮಕ ವಿಚಾರಗಳ ಮೂಲಕ ಆಯ್ಕೆಯಾಗಿದ್ದೀರಿ. ಅಭಿವೃದ್ದಿಯಲ್ಲಿ ವಿಫಲರಾಗಿದ್ದೀರಿ ಈ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಸಿದ್ದರಾಮಯ್ಯ ಅವರ ಶಕ್ತಿ ಕುಂದಿಸಲು ಮೊಟ್ಟೆ ಎಸೆಯಲಾಯಿತು ಎಂದು ದೂರಿದರು.