ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ‘ಪೇಸಿಎಂ’ ಪ್ರತಿಭಟನೆ ಮುಂದುವರಿದಿದೆ. ವಿರಾಜಪೇಟೆಯಲ್ಲಿ ಈಚೆಗೆ ಪ್ರತಿಭಟನೆ ನಡೆಸಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತೆ ಬುಧವಾರ ಮಡಿಕೇರಿ ನಗರ ಹಾಗೂ ಕುಶಾಲನಗರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಎರಡೂ ಕಡೆ ಸುಮಾರು 50ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ನೂರಾರು ಮಂದಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದಕ್ಕೂ ಮುನ್ನ ಅವರು ಚೌಕಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೂ ಮೆರವಣಿಗೆ ನಡೆಸಿ, ‘ಪೇಸಿಎಂ’ ಭಿತ್ತಿಪತ್ರಗಳನ್ನು ಹಿಡಿದು ಕಿಡಿಕಾರಿದರು.
‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಖುದ್ದಾಗಿ ಶೇ 40ರಷ್ಟು ಕಮಿಷನ್ ಕೊಡಬೇಕಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸರ್ಕಾರ ಯಾವುದೇ ತನಿಖೆಗೂ ಆದೇಶ ನೀಡಿಲ್ಲ. ಇದೊಂದು ಹೊಣೆಗೇಡಿತನದ ಸರ್ಕಾರ’ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ‘ಪೇಸಿಎಂ’ ಪ್ರತಿಭಟನೆ#kodagu #paycm pic.twitter.com/gy6UBHqJJ0
— Prajavani (@prajavani) September 28, 2022
ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ‘ಪೇಸಿಎಂ’ ಪೋಸ್ಟರ್ನ್ನು ಅಂಟಿಸಲು ಕಾರ್ಯಕರ್ತರು ಮುಂದಾಗುತ್ತಿದ್ದಂತೆ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ಕರೆ ನೀಡಲಾಗಿದ್ದ ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಟಿ.ಪಿ.ರಮೇಶ್, ರಾಜೇಶ್ ಯಲ್ಲಪ್ಪ, ಮುನೀರ್ ಅಹಮ್ಮದ್, ಪ್ರಕಾಶ್ ಆಚಾರ್ಯ, ಉದಯ್ಮ ತೆನ್ನೀರಾ ಮೈನಾ, ರಜಾಕ್, ಸಂದೀಪ್, ಕಾರ್ಯಪ್ಪ, ಮಿನಾಜ್ಹ್ ಇದ್ದರು.
ಕುಶಾಲನಗರದಲ್ಲೂ ಪ್ರತಿಭಟನೆ
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಪೇಸಿಎಂ ಪೋಸ್ಟರ್ ಪ್ರದರ್ಶಿಸಿದ ಪ್ರತಿಭಟನಾಕಾರರು ನಂತರ ಅಂಟಿಸಲು ಮುಂದಾದರು. ಕೂಡಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.