ಮಡಿಕೇರಿ: ಕೇಂದ್ರ ಸರ್ಕಾರ ಘೋಷಿಸಿರುವ ‘ಅಗ್ನಿಪಥ’ ಯೋಜನೆಯಿಂದ ಕೊಡಗು ಜಿಲ್ಲೆಯ ಯುವಕ, ಯುವತಿಯರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್ ಆಗ್ರಹಿಸಿದೆ.
ಯುವ ಕಾಂಗ್ರೆಸ್, ಎನ್ಎಸ್ಯುಐ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಯೋಜನೆಯಡಿ ಸೇನೆಗೆ ಸೇರುವ ಯುವಕರು ಕೇವಲ 4 ವರ್ಷ ಮಾತ್ರ ಸೇವೆ ಸಲ್ಲಿಸುತ್ತಾರೆ. ನಂತರ, ಅವರನ್ನು ಸೇನೆಯಿಂದ ಹೊರ ಹಾಕಲಾಗುತ್ತದೆ. ಆ ನಂತರ ಅವರು ಪಿಂಚಣಿ, ವೇತನ ಇಲ್ಲದೇ ಬದುಕು ನಡೆಸಲು ಕಷ್ಟಪಡಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಈಗ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ ಎಂದು ಹರಿಹಾಯ್ದರು.
ಕೊಡಗು ಜಿಲ್ಲೆ ಭಾರತೀಯ ಸೇನೆಗೆ ತನ್ನದೇ ಆದ ಕೊಡುಗೆ ನೀಡಿದೆ. ಅಪಾರ ಸಂಖ್ಯೆಯ ಜನರು ಇಂದಿಗೂ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನಷ್ಟು ಮಂದಿ ಸೇವೆ ಸಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ, ಕೇವಲ ನಾಲ್ಕೆ ವರ್ಷಗಳಲ್ಲಿ ಅವರು ಸೇನೆಯಿಂದ ವಾಪಸ್ ಬರುವುದರಿಂದ ಅವರಿಗೆ ಅನ್ಯಾಯವಾಗಲಿದೆ. ಕೂಡಲೇ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.