ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಧಾರಾಕಾರ ಮಳೆ ಮುಂದುವರಿದಿದೆ. ಪಯಸ್ವಿನಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ.ಭಾಗಮಂಡಲದಲ್ಲಿ ಕಾವೇರಿ ನದಿ ಭೋರ್ಗರೆಯುತ್ತಿದೆ. ಬೆಳಿಗ್ಗೆಯಿಂದ ಭಾಗಮಂಡಲ- ನಾಪೋಕ್ಲು ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.ಸದ್ಯ ಭಾಗಮಂಡಲ- ಮಡಿಕೇರಿ ರಸ್ತೆಯಲ್ಲಿ ಸಂಪರ್ಕ ಇದೆ.
ಕಳೆದ ಮೂರು ದಿನಗಳಿಂದ ಸ್ವಲ್ಪವೂ ಬಿಡುವು ನೀಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಚೆಂಬು ಗ್ರಾಮದಲ್ಲಿ ಜಾನುವಾರುಗಳಿಗೆ ಆಹಾರದ ಕೊರತೆ ಎದುರಾಗಿದೆ. ರೈತರು ಮನೆಯಿಂದ ಹೊರಬಾರದಷ್ಟು ಪ್ರಮಾಣದಲ್ಲಿ ಇಲ್ಲಿ ಮಳೆ ಸುರಿಯುತ್ತಿದೆ. ಹೀಗಾಗಿ ಜಿಲ್ಲಾಡಳಿತ ಜಾನುವಾರುಗಳಿಗೆ ಮೇವು ನೀಡುವ ಕಾರ್ಯ ಆರಂಭಿಸಿದೆ.
ಜಿಲ್ಲೆಯಲ್ಲಿ ಇಂದೂ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಭಾರಿ ಮಳೆಯ ಮುನ್ನಚ್ಚರಿಕೆ ನೀಡಲಾಗಿದೆ. ಶುಕ್ರವಾರ ಬೆಳಿಗ್ಗೆ ಗಾಳಿಯೂ ಬಿರುಸಿನಿಂದ ಬೀಸುತ್ತಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ ಡಿ ಆರ್ ಎಫ್) ನ್ನು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಮಡಿಕೇರಿ ತಾಲ್ಲೂಕಿನ ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 15 ಸೆಂ.ಮೀನಷ್ಟು ಭಾರಿ ಮಳೆಯಾಗಿದೆ.ಭಾಗಮಂಡಲ, ಗಾಳಿಬೀಡಿನಲ್ಲಿ 12, ಶೆಟ್ಟಿಗೆರೆ 8, ಬಿಟ್ಟಂಗಲದಲ್ಲಿ 7 ಸೆಂ.ಮೀನಷ್ಟು ಮಳೆ ಸುರಿದಿದೆ.